ಕಾಂಗ್ರೆಸ್
ಬೆಂಗಳೂರು:‘ಯುವ ರಾಜಕೀಯ ಕಾರ್ಯಕರ್ತರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವ ಕಾಂಗ್ರೆಸ್ ‘ರಾಷ್ಟ್ರೀಯ ಪದಾಧಿಕಾರಿಗಳು’ (ಎನ್ಒಬಿ) ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಬಂಡಾರಿ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ನಮ್ಮ ಸಂವಿಧಾನ ಅಪಾಯದಲ್ಲಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ನಮ್ಮ ಹಕ್ಕುಗಳು, ಘನತೆಯ ರಕ್ಷಣೆ, ಸಂವಿಧಾನದ ಆಶಯಗಳು, ಮೌಲ್ಯಗಳ ಪ್ರತಿಪಾದನೆಗೆ ಯುವ ವರ್ಗವನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ’ ಎಂದರು.
‘ಎಂಟು ತಿಂಗಳ ಈ ಕಾರ್ಯಕ್ರಮದ ಅವಧಿಯಲ್ಲಿ ಸಂಘಟನೆ, ಚಳವಳಿ, ಸಿದ್ಧಾಂತಗಳು, ನಾಯಕತ್ವ ಕುರಿತು ತರಬೇತಿ ನೀಡಲಾಗುವುದು’ ಎಂದರು.
‘35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾಜಿಕ ಅಥವಾ ರಾಜಕೀಯ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಯುವ ಕಾಂಗ್ರೆಸ್ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು’ ಎಂದೂ ಅವರು ತಿಳಿಸಿದರು.
‘ಆಸಕ್ತ ಯುವ ನಾಯಕರು www.iyc.in/nob-introduction ನಲ್ಲಿ ಅರ್ಜಿ ಸಲ್ಲಿಸಬಹುದು’ ಎಂದೂ ತಿಳಿಸಿದರು.
ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಾಹುಬಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.