ಬೆಂಗಳೂರು: ಕೋವಿಡ್ ರೋಗಿಗಳಿಗೆ ಔಷಧಿ ಮತ್ತು ಇತರ ಸೌಲಭ್ಯಗಳ ಅಕ್ರಮ ವಿತರಣೆಯ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆದೇಶದಂತೆ ಪೊಲೀಸರು ಯುವ ಕಾಂಗ್ರೆಸ್ ಮುಖಂಡ ಬಿ.ವಿ. ಶ್ರೀನಿವಾಸ್ ಅವರ ವಿಚಾರಣೆ ನಡೆಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯನ್ನು ದೂಷಿಸುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹೈಕೋರ್ಟ್ ಆದೇಶದಂತೆ ದೆಹಲಿ ಪೊಲೀಸರು ಬಿ.ವಿ. ಶ್ರೀನಿವಾಸ್ ಅವರಲ್ಲದೇ ಬಿಜೆಪಿ ಸಂಸದ ಗೌತಮ್ ಗಂಭೀರ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಪಾಂಡೆ ಅವರನ್ನೂ ವಿಚಾರಣೆ ನಡೆಸಿದ್ದಾರೆ. ಆದರೆ, ಶ್ರೀನಿವಾಸ್ ವಿಚಾರಣೆಯ ವಿಷಯದಲ್ಲಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ’ ಎಂದಿದ್ದಾರೆ.
ಕೋವಿಡ್ ಔಷಧಿ ಮತ್ತು ಇತರ ಸೌಲಭ್ಯಗಳ ಅಕ್ರಮ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವುದಾಗಿ ದೆಹಲಿ ಪೊಲೀಸ್ ಅಪರಾಧ ಪತ್ತೆ ಘಟಕ ಈಗಾಗಲೇ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಆದೇಶದಂತೆ ಸಮಗ್ರ ತನಿಖೆ ನಡೆಸುವಂತೆ ದೆಹಲಿ ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.