ಡಿ.ಕೆ. ಶಿವಕುಮಾರ್
ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಹಾಸನದಲ್ಲಿ ಡಿ. 5ರಂದು ನಡೆಯಲಿರುವ ಕಾಂಗ್ರೆಸ್ ಸಮಾವೇಶವನ್ನು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದೀರಾ’ ಎಂಬ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ನಾವು ವೇದಿಕೆ ಸಿದ್ಧ ಮಾಡಬೇಕಲ್ಲವೇ? ಚುನಾವಣೆ ಸದ್ಯದಲ್ಲಿ ನಡೆಯಲಿರುವುದಂತೂ ನಿಜ’ ಎಂದರು.
‘ರಾಜ್ಯದಾದ್ಯಂತ ಪಕ್ಷದ ಸಮಾವೇಶ ಮಾಡುತ್ತೀರಾ’ ಎಂಬ ಪ್ರಶ್ನೆಗೆ, ‘ನಾವು ಇಡೀ ರಾಜ್ಯವನ್ನು ತಲುಪಬೇಕಿದೆ. ಹೀಗಾಗಿ, ಹಾಸನದ ಸಮಾವೇಶದ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ’ ಎಂದರು.
‘ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ’ ಎಂದು ಕೇಳಿದಾಗ, ‘ಸದ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಒಂದು ಸಚಿವ ಸ್ಥಾನ ಮಾತ್ರ ಬಾಕಿಯಿದೆ. ಈ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಿದ್ದಾರೆ. ಬೇರೆ ಯಾವುದೇ ಸ್ಥಾನ ಖಾಲಿ ಇಲ್ಲ’ ಎಂದರು.
‘ಸಚಿವರ ಕಾರ್ಯವೈಖರಿ ಬಗ್ಗೆ ನಿಮ್ಮಿಂದ ಹೈಕಮಾಂಡ್ ವರದಿ ಪಡೆಯುತ್ತಿದೆಯೇ’ ಎಂದು ಕೇಳಿದಾಗ, ‘ನಾನು ಕಳುಹಿಸುವುದು ಏನೂ ಇಲ್ಲ. ನಮ್ಮ ಹೈಕಮಾಂಡ್ ನಾಯಕರು ಅವರದೇ ಆದ ವ್ಯವಸ್ಥೆ ಹೊಂದಿದ್ದು, ಎಲ್ಲರ ಮಾಹಿತಿ ಪಡೆಯುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.