ಇಸ್ಲಾಮಾಬಾದ್ (ಪಿಟಿಐ): ದೇಶದ್ರೋಹದ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯದಂತೆ ನಿರ್ದೇಶನ ನೀಡಲು ಕೋರಿ ಇಸ್ಲಾಮಾಬಾದ್ ಹೈಕೋರ್ಟ್ಗೆ ಶುಕ್ರವಾರ ಮನವಿ ಸಲ್ಲಿಸಲಾಗಿದೆ.
ಹರೂನ್ ರಶೀದ್ ಎಂಬುವವರು ಈ ಮನವಿ ಸಲ್ಲಿಸಿದ್ದಾರೆ. ಇವರು, ೨೦೦೭ರಲ್ಲಿ ಲಾಲ್ ಮಸೀದಿ ಮೇಲಿನ ಸೇನಾ ಕಾರ್ಯಾಚರಣೆ ವೇಳೆ ಮೃತಪಟ್ಟ ಅಬ್ದುಲ್ ರಶೀದ್ ಎಂಬುವವರ ಪುತ್ರ.
‘ಮುಷರಫ್ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯದಂತೆ ನೋಡಿಕೊಳ್ಳಲು ಹಾಗೂ ಅವರಿಗೆ ಪಾಕಿಸ್ತಾನದಲ್ಲಿ ಅತ್ಯುತ್ತಮವಾದ ವೈದ್ಯಕೀಯ ಸೌಲಭ್ಯ ಒದಗಿಸಲು ಒಳಾಡಳಿತ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು’ ಎಂದು ಅವರು ನ್ಯಾಯಾಲಯವನ್ನು ಕೋರಿಕೊಂಡಿದ್ದಾರೆ.
ದೇಶದ್ರೋಹ ಪ್ರಕರಣದ ವಿಚಾರಣೆಗೆಂದು ವಿಶೇಷ ನ್ಯಾಯಾಲಯಕ್ಕೆ ಗುರುವಾರ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೃದಯಾಘಾತಕ್ಕೆ ಒಳಗಾಗಿದ್ದ ಮುಷರಫ್ ಅವರನ್ನು ರಾವಲ್ಪಿಂಡಿಯ ಸೇನಾ ಆಸ್ಪತ್ರೆಗೆ ಸೇರಿಸಲಾಗಿದೆ.
ವೈದ್ಯಕೀಯ ಚಿಕಿತ್ಸೆಗಾಗಿ ಮುಷರಫ್ ಅವರನ್ನು ವಿದೇಶಕ್ಕೆ ಕಳಿಸುವ ಸಾಧ್ಯತೆಯ ಬಗ್ಗೆ ದಟ್ಟ ವದಂತಿ ಇದೆ. ಹಾಗಾಗಿ ಹರೂನ್ ಅವರು ಈ ಮನವಿ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.