ADVERTISEMENT

`ವೃತ್ತಿಪರರಿಗೆ ನಿರ್ಬಂಧ: ಪ್ರಗತಿಗೆ ಅಡ್ಡಿ'

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಸೇಂಟ್ ಪೀಟರ್ಸ್‌ಬರ್ಗ್ (ಪಿಟಿಐ): ಅಂತರರಾಷ್ಟ್ರೀಯ ಮಟ್ಟದಲ್ಲಿ ವೃತ್ತಿಪರರು ಒಂದು ರಾಷ್ಟ್ರದಿಂದ ಇನ್ನೊಂದು ರಾಷ್ಟ್ರಕ್ಕೆ ಹೋಗುವುದಕ್ಕೆ ನಿರ್ಬಂಧ ಹೇರುವುದರಿಂದ ಮುಂಬರುವ ದಿನಗಳಲ್ಲಿ ಜಾಗತಿಕ ಪ್ರಗತಿಯ ಮೇಲೆ ಪರಿಣಾಮ ಬೀರಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ನಡೆಯುತ್ತಿರುವ `ಜಿ20' ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮನಮೋಹನ್ ಸಿಂಗ್, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಉದ್ಯೋಗ ಸೃಷ್ಟಿಸುವುದಕ್ಕಾಗಿ ಮೂಲಸೌಕರ್ಯಕ್ಕೆ ಉತ್ತೇಜನ ನೀಡಲು ವಿನೂತನ ಆರ್ಥಿಕ ಯೋಜನೆಗಳ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

`ಕೌಶಲ ಹೊಂದಿರುವ ಅಂತರರಾಷ್ಟ್ರೀಯ ಉದ್ಯೋಗಿಗಳಿಗೆ ಎಲ್ಲಿಯಾದರೂ ಕೆಲಸ ಮಾಡುವ ಅವಕಾಶ ನೀಡುವುದು ಜಾಗತಿಕ ಮಟ್ಟದಲ್ಲಿ ರಾಷ್ಟ್ರಗಳ ನಡುವಿನ ಏಕೀಕರಣಕ್ಕೆ ಅತ್ಯಂತ ಮುಖ್ಯವಾದುದು. ಇದಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಒಪ್ಪಂದಗಳನ್ನು ಬದಿಗಿಟ್ಟು, ಹೊಸ ನಿರ್ಬಂಧಿತ ಕ್ರಮಗಳನ್ನು ತಪ್ಪಿಸುವುದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ನಾವು ಕೈಗೊಳ್ಳಬೇಕು' ಎಂದು ಸಿಂಗ್ ಅಭಿಪ್ರಾಯ ಪಟ್ಟರು.

`ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯು ಈ ಶೃಂಗಸಭೆಯ ಪ್ರಮುಖ ಸಂದೇಶ ಎಂಬುದನ್ನು ಎಲ್ಲಾ ನಾಯಕರು ಒಪ್ಪಿಕೊಂಡಿದ್ದಾರೆ' ಎಂದೂ ಪ್ರಧಾನಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.