ವಿಶ್ವಸಂಸ್ಥೆ (ಪಿಟಿಐ): ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಎಂ.ಎಸ್.ಸುಬ್ಬುಲಕ್ಷ್ಮಿ ಅವರ ಜನ್ಮ ಶತಮಾನೋತ್ಸವದ ಗೌರವಾರ್ಥ ವಿಶ್ವಸಂಸ್ಥೆಯು ವಿಶೇಷ ಅಂಚೆ ಚೀಟಿ ಹೊರ ತರಲು ಮುಂದಾಗಿದೆ.
ವಿಶ್ವಸಂಸ್ಥೆಯ ಅಂಚೆ ಇಲಾಖೆಯು ಈ ವಿಷಯವನ್ನು ಖಚಿತ ಪಡಿಸಿದೆ. ಭಾರತದ 70ನೇ ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯುವ ಸಾಮಾನ್ಯ ಅಧಿವೇಶನದಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಲಾಗುವುದು.
ಸುಬ್ಬುಲಕ್ಷ್ಮಿ ಅವರು 1966ರಲ್ಲಿ ವಿಶ್ವಸಂಸ್ಥೆಯ ಮುಖ್ಯಕಚೇರಿಯಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದರು. ಈ ವರ್ಷ ಅದಕ್ಕೆ 50 ವರ್ಷ ತುಂಬುತ್ತದೆ. ಹೀಗಾಗಿ ಸುಬ್ಬುಲಕ್ಷ್ಮಿ ಅವರ ಜೀವನ ಮತ್ತು ಸಾಧನೆಯನ್ನು ಬಿಂಬಿಸುವ ಅವರ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಕಚೇರಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.