ವಾಷಿಂಗ್ಟನ್: ಅಫ್ಗಾನಿಸ್ತಾನದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಈ ವಿಷಯಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವಿನ ನಿಕಟವಾದ ಸಮನ್ವಯನ್ನು ಮುಂದುವರಿಸಲು ಒಪ್ಪಿಗೆ ಸೂಚಿಸಿದ್ದಾರೆ.
ತಾಲಿಬಾನಿಗಳು ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡ ನಂತರ, ಈ ವಾರದಲ್ಲಿ ಎರಡನೇ ಬಾರಿಗೆ ಉಭಯ ದೇಶಗಳ ನಾಯಕರು ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತು ಕುರಿತು ಚರ್ಚೆ ನಡೆಸಿದ್ದಾರೆ.
ಬ್ಲಿಂಕನ್ ಮತ್ತು ಜೈಶಂಕರ್ ಅವರು ದೂರವಾಣಿ ಮೂಲಕ ಅಫ್ಗಾನಿಸ್ತಾನದ ಪ್ರಸ್ತುತದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿರುವುದಾಗಿ ಅಮೆರಿಕದ ಸರ್ಕಾರದ ವಕ್ತಾರ ನೆಡ್ ಪ್ರೈಸ್ ತಿಳಿಸಿದರು.
ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ, ವಿದೇಶಾಂಗ ಸಚಿವ ಜೈಶಂಕರ್ ಅವರು ಗುರುವಾರ ಅಮೆರಿಕ ಮತ್ತಿತರ ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ನಡುವೆ, ಅಫ್ಗಾನಿಸ್ತಾನದಲ್ಲಿದ್ದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್ ಮತ್ತು ಸಿಬ್ಬಂದಿಯನ್ನು ಮಂಗಳವಾರ ಮಿಲಿಟರಿ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು.
ತಾಲಿಬಾನಿ ದಂಗೆಕೋರರು ಕಳೆದ ಭಾನುವಾರ ಅಫ್ಗಾನಿಸ್ತಾನದ ಮೇಲೆ ಹಿಡಿತ ಸಾಧಿಸಿದ ನಂತರ, ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳು ಅಫ್ಗಾನಿಸ್ತಾನದಲ್ಲಿರುವ ತಮ್ಮ ದೇಶದ ಸಾವಿರಾರು ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಮುಂದಾದವು. ಇದರಿಂದಾಗಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಪರಿಸ್ಥಿತಿ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.