
ಒಟ್ಟಾವಾ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಮಾರ್ಚ್ ಮೊದಲ ವಾರದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಕೆನಡಾದಲ್ಲಿನ ಭಾರತ ಹೈಕಮಿಷನರ್ ದಿನೇಶ್ ಪಟ್ನಾಯಕ್ ತಿಳಿಸಿದ್ದಾರೆ.
ಭೇಟಿ ಸಂದರ್ಭದಲ್ಲಿ ಯುರೇನಿಯಂ ಇಂಧನ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕೆನಡಾ ಪ್ರಧಾನಿಗಳ ಕಾರ್ಯಾಲಯವು ನಿರಾಕರಿಸಿದೆ. ಅಮೆರಿಕದಿಂದ ಆಚೆಗೂ ಕೆನಡಾದ ಮೈತ್ರಿಯನ್ನು ವಿಸ್ತರಿಸಲು ಕಾರ್ನಿ ಅವರು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದಾರೆ.
ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸಿಖ್ ಪ್ರತ್ಯೇಕತಾವಾದಿ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು. ಭಾರತ ಈ ಆರೋಪವನ್ನು ಅಲ್ಲಗಳೆದಿತ್ತು. ಇಲ್ಲಿಂದ ಹದಗೆಟ್ಟಿದ್ದ ಭಾರತ–ಕೆನಡಾ ಸಂಬಂಧವನ್ನು ಸುಧಾರಿಸಲು ಕಾರ್ನಿ ಯತ್ನಿಸುತ್ತಿದ್ದಾರೆ.
ಕಾರ್ನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಏಳು ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗಿದ್ದರು. ಅದೇ ರೀತಿ ಕಾರ್ನಿ ಸಂಪುಟದ ಹಲವು ಸಚಿವರೂ ಭಾರತಕ್ಕೆ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.