ವಾಷಿಂಗ್ಟನ್:ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಭಾರತಕ್ಕೆ ಅಮೆರಿಕ ಮತ್ತು ವಿಶ್ವಸಂಸ್ಥೆ ಸೂಚಿಸಿವೆ. ಪೌರತ್ವ (ತಿದ್ದುಪಡಿ) ಕಾಯ್ದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಹಲವೆಡೆ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿರುವ ಬೆನ್ನಲ್ಲೇ ಅಮೆರಿಕ ಮತ್ತು ವಿಶ್ವಸಂಸ್ಥೆ ಈಕುರಿತು ಪ್ರತಿಕ್ರಿಯೆ ನೀಡಿವೆ.
ಮಾನವಹಕ್ಕುಗಳ ಸಾರ್ವತ್ರಿಕ ಘೋಷಣೆಯಲ್ಲಿ ಉಲ್ಲೇಖಿಸಲಾಗಿರುವ ಮೂಲತತ್ವಗಳನ್ನು ಎತ್ತಿಹಡಿಯುವಂತೆ ಭಾರತಕ್ಕೆ ವಿಶ್ವಸಂಸ್ಥೆ ಸೂಚಿಸಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಯಲ್ಲಿರುವ ಅಂಶಗಳ ಬಗ್ಗೆ ಅಧ್ಯಯನ ನಡೆಸುತ್ತಿರುವುದಾಗಿಯೂ ಅದು ಹೇಳಿದೆ.
ಕಾಯ್ದೆ ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕವೂ ಹೇಳಿದೆ.
ಇದನ್ನೂ ಓದಿ: Explainer | ಏನಿದು ಪೌರತ್ವ ತಿದ್ದುಪಡಿ ಮಸೂದೆ?
‘ಭಾರತದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ಮಸೂದೆಗೆ ಅನುಮೋದನೆ ಪಡೆದಿರುವ ವಿಚಾರ ನಮಗೆ ತಿಳಿದಿದೆ. ಆ ಕುರಿತು ವ್ಯಕ್ತವಾದ ಸಾರ್ವಜನಿಕ ಅಭಿಪ್ರಾಯಗಳ ಕುರಿತೂ ಮಾಹಿತಿ ಇದೆ. ಮಸೂದೆಯು ಕಾನೂನಾಗಿ ಅನುಷ್ಠಾನಗೊಂಡ ನಂತರದ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇವೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರ ವಕ್ತಾರ ಫರ್ಹಾನ್ ಹಖ್ ಹೇಳಿದ್ದಾರೆ.
ಬಾಂಗ್ಲಾದೇಶ, ಅಫ್ಗಾನಿಸ್ತಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವುದಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಂಕಿತ ಹಾಕಿದ್ದು, ಮಸೂದೆಯು ಕಾಯ್ದೆ ರೂಪ ತಾಳಿತ್ತು. ಇದರ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿತ್ತು.
ಸಂಸತ್ನ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾದರೆಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ವಿಧಿಸಬೇಕು ಎಂದು ಅಂತರರಾಷ್ಟ್ರೀಯಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಮೆರಿಕದ ಆಯೋಗ ಅಲ್ಲಿನ ಸರ್ಕಾರವನ್ನು ಇತ್ತೀಚೆಗೆ ಒತ್ತಾಯಿಸಿತ್ತು. ಬಳಿಕ ಈ ಕುರಿತು ಅಮೆರಿಕದ ಆಯೋಗವನ್ನು ಭಾರತ ತರಾಟೆಗೆ ತೆಗೆದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.