
ವಿಶ್ವಸಂಸ್ಥೆ: ಪಾಕಿಸ್ತಾನಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆಯೆ ಇಲ್ಲ. ಇದು ಆ ರಾಷ್ಟ್ರಕ್ಕೆ ಹೊಸ ವಿಚಾರ. ಆಕ್ರಮಿತ ಪ್ರದೇಶಗಳಲ್ಲಿ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪಾಕಿಸ್ತಾನ ಕೊನೆಗೊಳಿಸಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಆಗ್ರಹಿಸಿದೆ.
‘ವಿಶ್ವಸಂಸ್ಥೆಯ ಭವಿಷ್ಯ’ ವಿಷಯದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯ ಮುಕ್ತ ಚರ್ಚೆಯಲ್ಲಿ ಪಾಕಿಸ್ತಾನ ಪ್ರತಿನಿಧಿ ಉಲ್ಲೇಖಿಸಿದ ವಿಚಾರಗಳಿಗೆ ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಚೌಕಟ್ಟಿನಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ. ಈ ವಿಚಾರಗಳು ಪಾಕಿಸ್ತಾನದ ಅರಿವಿಗೆ ಬಾರದ ವಿಚಾರಗಳು ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ಪುನರುಚ್ಚರಿಸಿದರು.
‘ಪಾಕಿಸ್ತಾನವು ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಪಾಕ್ ಸೇನಾ ಕಾರ್ಯಾಚರಣೆ, ಆಕ್ರಮಣ, ದೌರ್ಜನ್ಯ ಮತ್ತು ಸಂಪನ್ಮೂಲಗಳ ಲೂಟಿಯ ಬಗ್ಗೆ ಅಲ್ಲಿನ ಜನರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
‘ಭದ್ರತಾ ಮಂಡಳಿಯ 80 ವರ್ಷ ಹಳೆಯ ಸಂರಚನೆಯು ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ. ಹಾಗಾಗಿ ವಿಶ್ವಸಂಸ್ಥೆಯು ನೈಜ ಮತ್ತು ಸಮಗ್ರ ಸುಧಾರಣೆಗಳನ್ನು ತರಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.