ಕಠ್ಮಂಡು (ಪಿಟಿಐ): ‘ನೇಪಾಳದ ಸಿಂಧುಲಿ ಜಿಲ್ಲೆಯ ಬಾಗ್ಮತಿ ಪ್ರಾಂತ್ಯದಲ್ಲಿ ಕಂದಕಕ್ಕೆ ಕಾರೊಂದು ಉರುಳಿಬಿದ್ದ ಪರಿಣಾಮ, ಅದರಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರ ಪೈಕಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ’ ಎಂದು ಹಿಮಾಲಯನ್ ಟೈಮ್ಸ್ ಪತ್ರಿಕೆ ಬುಧವಾರ ವರದಿ ಮಾಡಿದೆ.
‘ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 500 ಮೀಟರ್ ಆಳಕ್ಕೆ ಉರುಳಿಬಿದ್ದಿದೆ. ಮೃತಪಟ್ಟ ನಾಲ್ವರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ’ ಎಂದು ಅದು ಹೇಳಿದೆ.
‘ಬಿಹಾರ ನೋಂದಣಿಯ ಕಾರು ಕಠ್ಮಂಡು ಕಡೆಗೆ ಪ್ರಯಾಣಿಸುತ್ತಿತ್ತು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಂಧುಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಇನ್ನೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಸಿಂಧುಲಿ ಜಿಲ್ಲಾ ಪೊಲೀಸ್ ಕಚೇರಿಯ ಎಸ್ಪಿ ದಿ ಕಠ್ಮಂಡು ಪೋಸ್ಟ್ ಪತ್ರಿಕೆಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.