
ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧದ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ–ಬಿಡಿ) ಸೋಮವಾರ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಕಾನೂನು ಜಾರಿ ಸಂಸ್ಥೆಗಳು ಈಗಾಗಲೇ ದೇಶಾದ್ಯಂತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿವೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ವ್ಯವಹಾರಗಳ ಸಲಹೆಗಾರರಾದ ಜಹಂಗೀರ್ ಆಲಂ ಚೌಧರಿ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.
2024ರಲ್ಲಿ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಶೇಖ್ ಹಸೀನಾ, ಮಾಜಿ ಗೃಹ ಸಚಿವ ಅಸಾದುಜ್ಜಾಮಾನ್ ಖಾನ್ ಕಮಲ್ ಹಾಗೂ ಮಾಜಿ ಐಜಿಪಿ ಚೌಧರಿ ಅಬ್ದುಲ್ಲಾ ಅಲ್–ಮುಮುನ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ನ್ಯಾಯಮಂಡಳಿಯು 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಸೋಮವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.