ಪಾಕಿಸ್ತಾನ
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಕುರಿತು ಭಾರತ ಹಾಗೂ ಅಫ್ಗಾನಿಸ್ತಾನದ ಜಂಟಿ ಹೇಳಿಕೆಗೆ ಸಂಬಂಧಿಸಿದಂತೆ ಅಫ್ಗಾನ್ ರಾಯಭಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.
ಅಫ್ಗಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಆರು ದಿನಗಳ ಭಾರತ ಪ್ರವಾಸವನ್ನು ಕೈಗೊಂಡಿದ್ದರು.
ಭಾರತ ಹಾಗೂ ಅಫ್ಗಾನಿಸ್ತಾನದ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಉಲ್ಲೇಖಕ್ಕೆ ಸಂಬಂಧಿಸಿದಂತೆ ಅಫ್ಗಾನ್ ರಾಯಭಾರಿಗೆ (ಪಶ್ಚಿಮ ಏಷ್ಯಾ-ಅಫ್ಗಾನಿಸ್ತಾನ) ಬಲವಾದ ಪ್ರತಿಭಟನೆ ದಾಖಲಿಸಲಾಯಿತು ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ (ಎಫ್ಒ) ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗ ಎಂದು ಉಲ್ಲೇಖಿಸುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರಕಟಣೆ ಹೇಳಿದೆ.
ಏಪ್ರಿಲ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದ ಅಫ್ಗಾನಿಸ್ತಾನ ಭಾರತ ಸರ್ಕಾರದೊಂದಿಗೆ ಒಗ್ಗಟ್ಟು ಪ್ರದರ್ಶಿಸಿತ್ತು. ಪ್ರಾದೇಶಿಕ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿತ್ತಲ್ಲದೆ ಈ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ನೆಲೆಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿತ್ತು.
ಭಯೋತ್ಪಾದನೆ ಪಾಕಿಸ್ತಾನದ ಆಂತರಿಕ ಸಮಸ್ಯೆ ಎಂಬ ಮುತ್ತಾಕಿ ಹೇಳಿಕೆಯನ್ನು ಪಾಕಿಸ್ತಾನ ತಿರಸ್ಕರಿಸಿದೆ ಎಂದು ಪ್ರಕಟಣೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.