ಸಮರ್ಕಂಡ್, ಉಜ್ಬೇಕಿಸ್ತಾನ:ಕೋವಿಡ್ -19 ಪಿಡುಗು ಹಾಗೂ ಉಕ್ರೇನ್ ಬಿಕ್ಕಟ್ಟಿನಿಂದ ಉಂಟಾದ ಸಂಕಷ್ಟ ನಿವಾರಣೆಗೆ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸದಸ್ಯ ರಾಷ್ಟ್ರಗಳ ನಡುವೆ ಸುಗಮ ಸಾಗಣೆ ವ್ಯವಸ್ಥೆಯ ಅಗತ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದರು.
ಉಜ್ಬೇಕಿಸ್ತಾನದ ಸಮರ್ಕಂಡ್ ನಗರದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ವಾರ್ಷಿಕ ಶೃಂಗಸಭೆಯಲ್ಲಿ ಅವರು ಮಾತನಾಡಿದರು.
ಕೋವಿಡ್–19 ಪಿಡುಗು ಹಾಗೂ ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಇಂಧನ ಹಾಗೂ ಆಹಾರದ ಸಂಕಷ್ಟ ಎದುರಿಸುತ್ತಿವೆ. ಸಂಘಟನೆಯ ಸದಸ್ಯ ರಾಷ್ಟ್ರಗಳ ನಡುವೆ ಸರಕು ಸಾಗಣೆ ವಾಹನಗಳ ಸುಗಮ ಸಂಚಾರ ವ್ಯವಸ್ಥೆ ಈ ಸಂಕಷ್ಟಕ್ಕೆ ಪರಿಹಾರ ಒದಗಿಸಬಲ್ಲದು ಎಂದರು.
ಈ ಪ್ರತಿಪಾದನೆ ಮೂಲಕ ಮೋದಿ ಅವರು, ಸರಕು ವಾಹನಗಳ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಡುವ ಸಂಬಂಧ ಪಾಕಿಸ್ತಾನದ ಮೇಲೆ ಸೂಚ್ಯವಾಗಿ ಒತ್ತಡ ಹೇರುವ ಪ್ರಯತ್ನ ಮಾಡಿದರು.
ಮೋದಿ– ಷಿ ಮುಖಾಮುಖಿ: ಪೂರ್ವ ಲಡಾಖ್ನಲ್ಲಿ ಉಭಯ ದೇಶಗಳ ನಡುವೆ ಗಡಿಗೆ ಸಂಬಂಧಿಸಿದ ಬಿಕ್ಕಟ್ಟು ಪ್ರಾರಂಭವಾದ ಎರಡು ವರ್ಷಗಳ ನಂತರ, ಇದೇ ಮೊದಲ ಬಾರಿಗೆ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ಈ ಶೃಂಗಸಭೆಯಲ್ಲಿ ವೇದಿಕೆ ಹಂಚಿಕೊಂಡರು. ಆದರೆ, ಉಭಯ ನಾಯಕರ ನಡುವೆ ಮಾತುಕತೆ ನಡೆಯಲಿದೆ ಎಂಬ ನಿರೀಕ್ಷೆ ಹುಸಿಯಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.