ನ್ಯೂಯಾರ್ಕ್: ಭಯೋತ್ಪಾದನೆ, ಹವಾಮಾನ ವೈಪರೀತ್ಯ, ಭಾರತ– ಪೆಸಿಫಿಕ್ ಮತ್ತು ವಿಶ್ವಸಂಸ್ಥೆ ಸುಧಾರಣೆಯಂತಹ ಜಾಗತಿಕ ವಿಷಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಚರ್ಚೆಗೆ ತೆಗೆದುಕೊಳ್ಳುವಂತೆ ಭಾರತವು ಒತ್ತಾಯಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದರು.
ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳು ಪ್ರಮುಖ ವಿಷಯವಾಗುವ ನಿರೀಕ್ಷೆ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿ, ಭಯೋತ್ಪಾದನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳು, ಮಧ್ಯ ಏಷ್ಯಾ ಮತ್ತು ಆಫ್ರಿಕಾದಲ್ಲಿನ ಸಂಘರ್ಷಗಳು ಕೂಡ ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದರು.
ಅಬ್ದುಲ್ಲಾ ಸಾಹಿದ್ ಅವರ ಅಧ್ಯಕ್ಷತೆಯಲ್ಲಿ ಈ ವರ್ಷದ ಯುಎನ್ಜಿಎ ಅಧಿವೇಶನವು ಈ ತಿಂಗಳ 14ರಿಂದ ಆರಂಭವಾಗಿದೆ. ಈ ತಿಂಗಳ 21ರಿಂದ ಉನ್ನತ ಮಟ್ಟದ ಸಭೆ ಆರಂಭವಾಗಲಿದ್ದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಂಗಳವಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 25ರಂದು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.