Aಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಖಂಡಿಸಿ ಬಂಗಾಳದ ವಲಸಿಗರು ಸೇರಿದಂತೆ ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರು ಅಮೆರಿಕದ 30ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆ ನಡೆಸಿದರು.
ಹಿಂಸಾಚಾರ ಮತ್ತು ಹತ್ಯೆಗಳ ಬಗ್ಗೆ ಜನರ ಗಮನ ಸೆಳೆಯಲು ಪ್ರತಿಭಟನಾಕಾರರು ‘ಹಿಂದೂಗಳ ಜೀವನದ ವಿಷಯ‘, ‘ ಹಿಂದೂ ಜನಾಂಗೀಯ ಹತ್ಯೆಯ ವಿರುದ್ಧ ಪ್ರತಿಭಟನೆ‘ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಜತೆ ನಿರಂತರ ಸಂಪರ್ಕ ಹೊಂದಿರುವ ಸಿಲಿಕಾನ್ ವ್ಯಾಲಿಯ ಉದ್ಯಮಿ ಜುಧಜಿತ್ ಸೇನ್ ಮಜುಂದಾರ್, ‘ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹತ್ಯೆಯಿಂದ ಇಲ್ಲಿನ ವಲಸಿಗರಿಗೆ ತೀವ್ರ ದುಃಖವಾಗಿದೆ‘ ಎಂದರು.
‘ಫಲಿತಾಂಶ ಪ್ರಕಟವಾದ ನಂತರ ನಡೆದ ದಾಳಿಯಲ್ಲಿ ಸಿಲುಕಿದ್ದ ಕೆಲವು ಸ್ನೇಹಿತರು ನನಗೆ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡಿ ಸಹಾಯ ಕೇಳಿದರು. ಅಂಗಡಿಗಳನ್ನು ಲೂಟಿ ಮಾಡುತ್ತಿದ್ದಾರೆ, ಮನೆಗಳ ಮೇಲೆ ಬಾಂಬ್ ಎಸೆಯುತ್ತಿದ್ದಾರೆ‘ ಎಂದು ಹೇಳಿದರು‘ ಎಂದು ಮಜುಂದಾರ್ ತಿಳಿಸಿದರು.
‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ವ್ಯವಸ್ಥಿತವಾಗಿ ಸರ್ವನಾಶ ಮಾಡುವುದರ ವಿರುದ್ಧ ಬಂಗಾಳಿ ವಲಸಿಗರು ಮಮತಾ ಬ್ಯಾನರ್ಜಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಮೆರಿಕ, ಕೆನಡಾ, ಬ್ರಿಟನ್, ನೈಜೀರಿಯಾ, ಥಾಯ್ಲೆಂಡ್ ಇತರೆ ದೇಶಗಳಲ್ಲಿ ಸಾಮಾಜಿಕ ಜಾಲತಾಣದ ಮೂಲಕ #ಮಮತಾಸ್ಟಾಪ್ವಾಯ್ಲೆನ್ಸ್‘ ಹ್ಯಾಷ್ ಟ್ಯಾಗ್ನೊಂದಿಗೆ ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಅಮಿತ್ ಮಾಳವಿಯಾ ಭಾನುವಾರ ಟ್ವೀಟ್ ಮಾಡಿದ್ದರು.
ಮೇ 2 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಹಿಂಸಾಚಾರ ನಡೆದಿತ್ತು. ಈ ಗಲಭೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.