ಕೊಲಂಬೊ: ‘ಶ್ರೀಲಂಕಾದ ವಾಯವ್ಯ ಪ್ರಾಂತ್ಯದಲ್ಲಿ ಬುದ್ಧನ ಪ್ರತಿಮೆಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರ ವಶದಲ್ಲಿದ್ದ 45 ವರ್ಷದ ಭಾರತೀಯ ಪ್ರಜೆಯೊಬ್ಬರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ವಾಯವ್ಯ ಪ್ರಾಂತ್ಯದ ಕುಲಿಯಪಿಟಿಯಾ ಪಟ್ಟಣದಲ್ಲಿ ಬುದ್ಧನ ಪ್ರತಿಮೆಗಳಿಗೆ ಹಾನಿ ಮಾಡಿದ ಆರೋಪದಲ್ಲಿ ಭಾರತೀಯ ಪ್ರಜೆಯನ್ನು ಮಾರ್ಚ್ 18ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ಹೆಸರನ್ನು ಹೇಳಲು ಪೊಲೀಸರು ನಿರಾಕರಿಸಿದ್ದಾರೆ.
‘ನ್ಯಾಯಾಲಯಕ್ಕೆ ಹಾಜರು ಪಡಿಸಿದ ನಂತರ ಶಂಕಿತ ಆರೋಪಿಯನ್ನು ವಾರಿಯಾಪೋಲಾ ಜೈಲಿನಲ್ಲಿರಿಸಲಾಗಿತ್ತು. ಸೋಮವಾರ ರಾತ್ರಿ ಎದೆನೋವು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಆರೋಪಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಸಾವನ್ನಪ್ಪಿದ್ದಾರೆ’ ಎಂದು ಜೈಲಿನ ಅಧಿಕಾರಿ ಚಂದನ ಏಕನಾಯಕೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಪಿಯು, 16 ವರ್ಷಗಳ ಹಿಂದೆ ಶ್ರೀಲಂಕಾದ ಮಹಿಳೆಯೊಬ್ಬರನ್ನು ವಿವಾಹವಾಗಿ ಅಲ್ಲಿಯೇ ನೆಲೆಸಿದ್ದ ಎಂದು ‘ದಿ ಡೈಲಿ ಮಿರರ್’ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.