ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನಿರ್ಧಾರವನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದು ‘ರಾಜಕೀಯ ಪ್ರೇರಿತ’ ಎಂದು ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಖ್ ಕಾಕರ್ ಆರೋಪಿಸಿದ್ದಾರೆ. ಅಲ್ಲದೆ ಕಾಶ್ಮೀರದ ಜನರಿಗೆ ನಮ್ಮ ನೈತಿಕ, ರಾಜಕೀಯ ಬೆಂಬಲವಿದೆ ಎಂದು ಪುನರುಚ್ಚರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ಸೋಮವಾರ (ಡಿ.11) ಸರ್ವಾನುಮತದಿಂದ ಎತ್ತಿಹಿಡಿದಿತ್ತು.
‘ಕಾಶ್ಮೀರವು ಪಾಕಿಸ್ತಾನದ ಜೀವನಾಡಿ. ಕಾಶ್ಮೀರವಿಲ್ಲದೆ ‘ಪಾಕಿಸ್ತಾನ’ ಎಂಬ ಪದವು ಅಪೂರ್ಣವಾಗಿದೆ. ಪಾಕಿಸ್ತಾನ ಮತ್ತು ಕಾಶ್ಮೀರದ ಜನರು ಅನನ್ಯ ಬಾಂಧವ್ಯ ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರವು ಪಾಕಿಸ್ತಾನದ ವಿದೇಶಾಂಗ ನೀತಿಯ ಪ್ರಮುಖ ಅಂಶವಾಗಿ ಉಳಿದಿದೆ’ ಎಂದು ಪಾಕ್ ಆಕ್ರಮಿತ ಕಾಶ್ಮೀರದ (PoK) ವಿಧಾನಸಭೆಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಕಾಕರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.