ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಜೆರುಸಲೇಂ: ಹಮಾಸ್ ನಡುವಿನ ಕದನ ವಿರಾಮ ಮತ್ತು ಗಾಜಾ ಪಟ್ಟಿಯಲ್ಲಿ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವವರ ಬಿಡುಗಡೆಗಾಗಿ ಮಾಡಿರುವ ಒಪ್ಪಂದವನ್ನು ಇಸ್ರೇಲ್ ಸಂಪುಟ ಅನುಮೋದಿಸಿದೆ.
ಇಸ್ರೇಲ್–ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಭಾನುವಾರದಿಂದ ಜಾರಿಗೆ ಬರಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ತಿಳಿಸಿದೆ.
ಕದನ ವಿರಾಮ ಒಪ್ಪಂದ ಘೋಷಣೆಯಾದ ಬೆನ್ನಲ್ಲೇ ಗಾಜಾದ ವಿವಿದೆಢೆ ಇಸ್ರೇಲ್ ಪಡೆಗಳು ದಾಳಿ ನಡೆಸಿದ್ದು, ಇಂದು (ಶನಿವಾರ) ಮುಂಜಾನೆ ಐವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕದನ ವಿರಾಮ ಒಪ್ಪಂದ ಘೋಷಣೆಯಾದ ಬಳಿಕ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಈವರೆಗೆ 119 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಜನರು ಕದನ ವಿರಾಮ ಘೋಷಣೆ ಒಪ್ಪಂದದ ಸಂಭ್ರಮದಲ್ಲಿ ಇದ್ದಾಗಲೇ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಗಾಜಾದಲ್ಲಿನ ಪ್ಯಾಲೆಸ್ಟೀನಿಯನ್ನರು ತಿಳಿಸಿದ್ದಾರೆ.
ಗಾಜಾ ಪಟ್ಟಿಯಲ್ಲಿ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವವರ ಬಿಡುಗಡೆ ಮಾಡಲು ಒಪ್ಪಂದ ಆಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶುಕ್ರವಾರ ದೃಢಪಡಿಸಿದ್ದರು.
ಒಪ್ಪಂದದ ಪ್ರಕಾರ, ಹಮಾಸ್ ಒತ್ತೆ ಇರಿಸಿಕೊಂಡಿರುವ 33 ಮಂದಿ ಬಿಡುಗಡೆಗೆ ಪ್ರತಿಯಾಗಿ, ಇಸ್ರೇಲ್ನ ಬಂಧನದಲ್ಲಿರುವ ನೂರಾರು ಪ್ಯಾಲೆಸ್ಟೀನಿಯರನ್ನು ಮುಂದಿನ ಆರು ವಾರಗಳಲ್ಲಿ ಬಿಡುಗಡೆ ಮಾಡಬೇಕಿದೆ. ಜೊತೆಗೆ, ಈ ಒಪ್ಪಂದದಿಂದ ಸ್ಥಳಾಂತರಗೊಂಡ ಸಾವಿರಾರು ಜನರು ಗಾಜಾದಲ್ಲಿ ಅಳಿದುಳಿದ ತಮ್ಮ ಮನೆಗಳಿಗೆ ಪುನಃ ತೆರಳಲು ಸಾಧ್ಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.