
ಭಾರತದೊಂದಿಗೆ ನಂಟು ಉಳಿಸಿಕೊಂಡಿದ್ದ ಖಲೀದಾ ಜಿಯಾ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಹುಟ್ಟಿನಿಂದ ಭಾರತದ ಜಂತೆ ನಂಟು ಹೊಂದಿದ್ದ ಖಲೀದಾ ತಮ್ಮ ರಾಜಕೀಯ ಜೀವನದುದ್ದಕ್ಕೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದರು.
1991ರಲ್ಲಿ ಬಾಂಗ್ಲಾದ ಮೊದಲ ಮಹಿಳಾ ಪ್ರಧಾನಿಯಾದ ಖಲೀದಾ ಅವರು ಆಗಾಗ ಭಾರತಕ್ಕೆ ಭೇಟಿ ನೀಡುತ್ತಿದ್ದರು. ರಾಜತಾಂತ್ರಿಕ ಸಂಬಂಧವೂ ಉತ್ತಮವಾಗಿತ್ತು. ಭಾರತದ ಪ್ರಧಾನಿ ಮನಮೋಹನ ಸಿಂಗ್ ಅವರ ಆಹ್ವಾನದ ಮೇರೆಗೆ 2006ರಲ್ಲಿ ಹುದ್ದೆಯಲ್ಲಿದ್ದಾಗ ಖಲೀದಾ ಕೊನೆಯ ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.
ಈ ವೇಳೆ ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಸಮಸ್ಯೆ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದರು. ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮತ್ತು ಮಾದಕ ದ್ರವ್ಯಗಳ ಅಕ್ರಮ ಸಾಗಣೆ ತಡೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಜತೆಗೆ ಭದ್ರತೆ, ನೀರು ಹಂಚಿಕೆ ಕುರಿತಾದ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಿದ್ದರು.
ಈ ಭೇಟಿಯಲ್ಲಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೂ ಮಾತುಕತೆ ನಡೆಸಿದ್ದರು.
ವಿರೋಧ ಪಕ್ಷದ ನಾಯಕಿಯಾಗಿ ಭೇಟಿ
ಅಧಿಕಾರ ಕಳೆದುಕೊಂಡ ನಂತರವೂ ಭಾರತದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡಿದ್ದ ಖಲೀದಾ, 2012ರಲ್ಲಿ ವಿದೇಶಾಂಗ ಸಚಿವರ ಆಹ್ವಾನದ ಮೇರೆಗೆ ಭಾರತಕ್ಕೆ ಭೇಟಿ ನೀಡಿದ್ದರು.
2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖಲೀದಾ ಭೇಟಿಯಾಗಿದ್ದರು.
ಖಲೀದಾ ಜಿಯಾ 1945ರಲ್ಲಿ ಬ್ರಿಟಿಷ್ ಭಾರತದ ಬಂಗಾಳ ಪ್ರೆಸಿಡೆನ್ಸಿಯ ಆಗಿನ ಅವಿಭಜಿತ ದಿನಾಜ್ಪುರ ಜಿಲ್ಲೆಯಲ್ಲಿ ಜನಿಸಿದ್ದರು. (ಈಗ ಭಾರತದ ಪಶ್ಚಿಮ ಬಂಗಾಳದ ಜಲ್ಪೈಗುರಿ) ವಿಭಜನೆಯ ನಂತರ, ಖಲೀದಾ ಮತ್ತು ಅವರ ಕುಟುಂಬ ದಿನಾಜ್ಪುರ ಪಟ್ಟಣಕ್ಕೆ (ಈಗ ಬಾಂಗ್ಲಾದೇಶದಲ್ಲಿದೆ) ವಲಸೆ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.