
ಪೆಶಾವರ: ಪಾಕಿಸ್ತಾನವು ಗಿಲ್ಗಿಟ್–ಬಾಲ್ಟಿಸ್ತಾನ ಪ್ರದೇಶದಲ್ಲಿ ಸೇನೆಯನ್ನು ನಿಯೋಜಿಸಿದ್ದು, ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಹಾಗೂ ಇರಾನ್ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೆ 26 ಮಂದಿ ಸಾವಿಗೀಡಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಈ ಕ್ರಮ ಕೈಗೊಳ್ಳಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಗಿಲ್ಗಿಟ್ ಹಾಗೂ ಸ್ಕರ್ದುನಲ್ಲಿ ಮೂರು ದಿನ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಸಚಿವ ಗುಲಾಂ ಅಬ್ಬಾಸ್ ತಿಳಿಸಿದ್ದಾರೆ.
ಗಿಲ್ಗಿಟ್–ಬಾಲ್ಟಿಸ್ತಾನದ ಸ್ಕರ್ದುನಲ್ಲಿರುವ ವಿಶ್ವಸಂಸ್ಥೆ ಕಚೇರಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದರು. ಬಳಿಕ ನಡೆದ ಘರ್ಷಣೆಯಲ್ಲಿ ಸೈನಿಕ ಸೇರಿದಂತೆ 14 ಮಂದಿ ಸಾವಿಗೀಡಾಗಿದ್ದಾರೆ.
ಕರಾಚಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ನುಗ್ಗಲು ಪ್ರತಿಭಟನಕಾರರು ಭಾನುವಾರ ಯತ್ನಿಸಿದ ವೇಳೆ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ 10 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಸ್ಲಾಮಾಬಾದ್ನಲ್ಲಿಯೂ ಪ್ರತಿಭಟನೆ ವೇಳೆ ಇಬ್ಬರು ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.