ಕಠ್ಮಂಡು(ನೇಪಾಳ): ಇಲ್ಲಿನ ಪ್ರಮುಖ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶದಲ್ಲಿರುವ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ ಗ್ರಾಮಗಳ ಜನರು ಜಾನುವಾರುಗಳು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಇಲ್ಲಿನ ನದಿಗಳಾದ ಕಮ್ಲಾ, ಬಾಗ್ಮತಿ, ಗಂಡಕ್ ಮತ್ತು ಕೋಸಿ ನದಿಗಳ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ, ಪ್ರವಾಹ ಉಂಟಾಗಿ ಕೆಲ ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ.
ನೇಪಾಳದಲ್ಲಿ ಕಾರ್ಮೋಡ ಆವರಿಸಿದ್ದು ಶುಕ್ರವಾರ, ಶನಿವಾರವೂ ಮಳೆಯಾಗುವ ಸಾಧ್ಯತೆ ಇದು ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೇಪಾಳ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿದ್ದರಿಂದ ಜಲಾನಯನ ಪ್ರದೇಶದಲ್ಲಿರುವ ಬಿಹಾರದ ಉತ್ತರ ಭಾಗದ ಜನರು ತೀವ್ರ ಆತಂಕಗೊಂಡಿದ್ದಾರೆ. ಈ ಕಾರಣದಿಂದಾಗಿ ಬಿಹಾರ ನೀರಾವರಿ ಇಲಾಖೆ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಯಾವುದೇ ಕ್ಷಣದಲ್ಲೂ ಪ್ರವಾಹದಿಂದ ಹಾನಿ ಸಂಭವಿಸಿದರೂ ಇದನ್ನು ಎದುರಿಸಲು ಸರ್ಕಾರ ಸಿದ್ದವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.