ಖಾಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು
-ಪಿಟಿಐ ಚಿತ್ರ
ವಾಷಿಂಗ್ಟನ್: ಖಾಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಯತ್ನದ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಮೆರಿಕವು ಭಾರತ ಸರ್ಕಾರದ ಜೊತೆ ಕೆಲಸ ಮಾಡುತ್ತಿದೆ ಎಂದು ಜೋ ಬೈಡನ್ ಆಡಳಿತ ತಿಳಿಸಿದೆ.
ಪನ್ನು ಹತ್ಯೆಗೆ ಅಮೆರಿಕದಲ್ಲಿ ನಡೆದ ವಿಫಲ ಯತ್ನದ ಹಿಂದೆ ಭಾರತೀಯ ಪ್ರಜೆಯಾಗಿರುವ ನಿಖಿಲ್ ಗುಪ್ತ ಪಾತ್ರ ಇದೆ ಎಂದು ಅಮೆರಿಕದ ಅಧಿಕಾರಿಗಳು ಆರೋಪಿಸಿದ್ದಾರೆ. ಗುಪ್ತ ಅವರು ಕೇಂದ್ರ ಸರ್ಕಾರದ ನೌಕರರೊಬ್ಬರ ಜೊತೆ ಕೆಲಸ ಮಾಡುತ್ತಿದ್ದರು, ಪನ್ನು ಹತ್ಯೆ ಮಾಡುವವರಿಗೆ 1 ಲಕ್ಷ ಅಮೆರಿಕನ್ ಡಾಲರ್ ನೀಡಲು ಒಪ್ಪಿದ್ದರು ಎಂದು ಕೂಡ ಆರೋಪಿಸಲಾಗಿದೆ. ಪನ್ನು ಅಮೆರಿಕದ ನ್ಯೂಯಾರ್ಕ್ನಲ್ಲಿ ನೆಲೆಸಿದ್ದಾರೆ.
ಆರೋಪಗಳ ಬಗ್ಗೆ ತನಿಖೆ ನಡೆಸಲು ಕೇಂದ್ರ ಸರ್ಕಾರವು ಸಮಿತಿಯೊಂದನ್ನು ಈಗಾಗಲೇ ರಚಿಸಿದೆ. ಅಮೆರಿಕದ ಕಾಂಗ್ರೆಸ್ಸಿನಲ್ಲಿ ಬುಧವಾರ ನಡೆದ ವಿಚಾರಣೆಗೆ ಹಾಜರಾಗಿದ್ದ ಅಮೆರಿಕದ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಡೊನಾಲ್ಡ್ ಲು ಅವರು ಸದನದ ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯರಿಗೆ, ‘ಇದು ಅಮೆರಿಕ ಮತ್ತು ಭಾರತ ನಡುವಿನ ಒಂದು ಗಂಭೀರ ವಿಚಾರ. ಭಾರತದ ಪ್ರಜೆಯೊಬ್ಬ, ಭಾರತ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ಒಬ್ಬರ ಪರವಾಗಿ ಅಮೆರಿಕದ ಪ್ರಜೆಯೊಬ್ಬರನ್ನು ಅಮೆರಿಕದಲ್ಲಿಯೇ ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂದು ಕಾನೂನು ಇಲಾಖೆಯು ಆರೋಪಿಸಿದೆ. ಇದನ್ನು ನಾವು ತೀರಾ ಗಂಭೀರವಾಗಿ ಪರಿಗಣಿಸಿ, ಭಾರತ ಸರ್ಕಾರದಲ್ಲಿ ಉನ್ನತ ಮಟ್ಟದಲ್ಲಿ ವಿಷಯ ಪ್ರಸ್ತಾಪಿಸಿದ್ದೇವೆ’ ಎಂದು ವಿವರಿಸಿದ್ದಾರೆ.
‘ವಿಷಯದ ಬಗ್ಗೆ ಪರಿಶೀಲಿಸಲು ತನಿಖಾ ಸಮಿತಿಯೊಂದನ್ನು ರಚಿಸಿರುವುದಾಗಿ ಭಾರತ ಹೇಳಿದೆ. ಈ ವಿಚಾರವಾಗಿ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಕ್ರಮಗಳನ್ನು ಕೈಗೊಂಡು ನ್ಯಾಯ ಒದಗಿಸುವಂತೆ ನಾವು ಅವರನ್ನು ಆಗ್ರಹಿಸುತ್ತಿದ್ದೇವೆ’ ಎಂದು ಲು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.