ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.
ನಮ್ಮ ಸರ್ಕಾರವನ್ನು ಉರುಳಿಸಲು ವಿದೇಶಿಗರು ಪಿತೂರಿ ನಡೆಸಿದ್ದಾರೆ ಎಂದುಇಮ್ರಾನ್ ಖಾನ್ ಆರೋಪಿಸಿದ್ದಾರೆ.ಈ ಕುರಿತು ಜನರನ್ನುವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅವರುಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಮುತಾಹಿದಾ ಕ್ವಾಮಿ ಮೂವ್ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ. ಆ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.
ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ.
ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.
ಮಾರ್ಚ್ 31ರ ಕಲಾಪದಲ್ಲಿ ಅವಿಶ್ವಾಸ ನಿರ್ಣಯ ಬಗ್ಗೆ ಚರ್ಚೆ ನಡೆಯಲಿದೆ. ಬಳಿಕ ಏಪ್ರಿಲ್ 3ರಂದು ಮತದಾನ ನಡೆಯಲಿದೆ ಎಂದು ಸಚಿವ ಶೇಖ್ ರಶೀದ್ ಮಂಗಳವಾರ ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.