ವಾಷಿಂಗ್ಟನ್: ‘ಅಫ್ಗಾನಿಸ್ತಾನದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡ ನಂತರವೂ ಅಮೆರಿಕ ಆ ದೇಶದಲ್ಲಿ ಭಯೋತ್ಪಾದನೆ ವಿರುದ್ಧದ ತನ್ನ ಹೋರಾಟವನ್ನು ಮುಂದುವರಿಸಲಿದೆ‘ ಎಂದು ಎಂದು ಭಾರತೀಯ – ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಭಯೋತ್ಪಾದನೆ ವಿರುದ್ಧದ ಹೋರಾಟ ಮುಂದುವರಿಸುವ ಮೂಲಕ, ಐಎಸ್ ಮತ್ತು ಅಲ್ – ಖೈದಾದಂತಹ ಭಯೋತ್ಪಾದಕ ಗುಂಪುಗಳಿಗೆ ಅಫ್ಗಾನಿಸ್ತಾನ ಸುರಕ್ಷಿತ ತಾಣವಾಗಲು ಅವಕಾಶ ನೀಡುವುದಿಲ್ಲ‘ ಎಂದು ತಿಳಿಸಿದ್ದಾರೆ.
ಅಮೆರಿಕ ಮತ್ತು ಭಾರತ ಜಂಟಿಯಾಗಿ ಹಲವು ರೀತಿಯಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವ ಸಾಧ್ಯತೆ ಇದೆ. ಅದರಲ್ಲಿ ಗುಪ್ತಚರ ವಿಭಾಗಗಳು ಒಟ್ಟಾಗಿ ಕೆಲಸ ಮಾಡುವ ಜತೆಗೆ, ಮಾಹಿತಿಯನ್ನು ಹಂಚಿಸಿಕೊಳ್ಳಬಹುದು. ಭಯೋತ್ಪಾದಕರ ನೆಲೆಗಳನ್ನು ಪತ್ತೆ ಹಚ್ಚುವುದಕ್ಕಾಗಿ ಪರಸ್ಪರ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು‘ ಎಂದೂ ಅವರು ಹೇಳಿದ್ದಾರೆ.
ಭಯೋತ್ಪಾದನೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವನ್ನು ಮುಂದುವರಿಸಬೇಕು. ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ಮಾತ್ರವಲ್ಲದೇ, ವಿಶ್ವದಾದ್ಯಂತವಿರುವ ನಮ್ಮ ಮಿತ್ರ ರಾಷ್ಟ್ರಗಳು, ಪಾಲುದಾರರು ಈ ಪ್ರಯತ್ನವನ್ನು ಮುಂದುವರಿಸುತ್ತಾರೆ ಎಂದು ಭಾವಿಸಿರುವುದಾಗಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.