ರಾಜನಾಥ ಸಿಂಗ್, ಡಾನ್ ಜನ್
(ಚಿತ್ರ ಕೃಪೆ: X/@rajnathsingh)
ಚಿಂಗ್ಡಾವ್: ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾನ್ ಜನ್ ಅವರನ್ನು ಭೇಟಿಯಾಗಿರುವ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಭಾರತ ಮತ್ತು ಚೀನಾ ದ್ವಿಪಕ್ಷೀಯ ಬಾಂಧವ್ಯದಲ್ಲಿ ಧನಾತ್ಮಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಸಂಕೀರ್ಣತೆಗಳನ್ನು ತಪ್ಪಿಸಿಕೊಳ್ಳುವುದರ ಕುರಿತು ಪ್ರತಿಪಾದಿಸಿದ್ದಾರೆ.
ಚೀನಾದ ಚಿಂಗ್ಡಾವ್ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ ರಾಜನಾಥ ಸಿಂಗ್, ಬಳಿಕ ಚೀನಾದ ರಕ್ಷಣಾ ಸಚಿವರೊಂದಿಗೆ ರಚನಾತ್ಮಕ ಮಾತುಕತೆ ನಡೆಸಿದ್ದಾರೆ.
ಚೀನಾ ವಿರುದ್ಧ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಉಂಟಾದ ಸಂಘರ್ಷದ ಬಳಿಕ ಕಳೆದ ಅಕ್ಟೋಬರ್ನಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿತ್ತು. ಇದಾದ ಬಳಿಕ ಭಾರತದ ರಕ್ಷಣಾ ಸಚಿವರು ಚೀನಾ ಪ್ರವಾಸ ಕೈಗೊಂಡಿದ್ದಾರೆ.
'ಚೀನಾದ ರಕ್ಷಣಾ ಸಚಿವ ಡಾನ್ ಜನ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ದ್ವಿಪಕ್ಷೀಯ ಬಾಂಧವ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ನಾವು ರಚನಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ' ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ.
'ಸುಮಾರು ಆರು ವರ್ಷಗಳ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಂಡಿದ್ದಕ್ಕೆ ನನ್ನ ಸಂತಸವನ್ನು ವ್ಯಕ್ತಪಡಿಸಿದ್ದೇನೆ' ಎಂದಿದ್ದಾರೆ.
ಈ ಸಂದರ್ಭದಲ್ಲಿ ಡಾನ್ ಅವರಿಗೆ 'ಮಧುಬನಿ' ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.