ಪ್ರಾತಿನಿಧಿಕ ಚಿತ್ರ
ಕಠ್ಮಂಡು: ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ (ನೇಪಾಳದ ರಾಜಧಾನಿ) ಕಠ್ಮಂಡುವಿನಲ್ಲಿ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಯು ಭಾನುವಾರ ಸಂಘರ್ಷಕ್ಕೆ ತಿರುಗಿದೆ.
ಪೊಲೀಸರು ಮತ್ತು ಶಿಕ್ಷಕರ ನಡುವಿನ ಜಟಾಪಟಿಯಲ್ಲಿ 7 ಶಿಕ್ಷಕರು ಹಾಗೂ ಹಲವು ಪೊಲೀಸರು ಗಾಯಗೊಂಡಿದ್ದಾರೆ.
ನಯಾ ಬನೇಶ್ವರ ನಗರಕ್ಕೆ ಪ್ರತಿಭಟನನಿರತರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಅವರನ್ನು ಚದುರಿಸಲು ಪೊಲೀಸರು ಲಾಠಿ ಹಾಗೂ ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಸಂಘರ್ಷ ಏರ್ಪಟ್ಟು ಶಿಕ್ಷಕರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವುದರ ಜತೆಗೆ ಶಿಕ್ಷಕರಿಗೆ ನೀಡುವ ವೇತನ ಹಾಗೂ ಸವಲತ್ತುಗಳನ್ನು ಹೆಚ್ಚಿಸಬೇಕು, ಇದಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ 1 ತಿಂಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದೆ. ದೇಶದ ವಿವಿಧ ಭಾಗಗಳಿಂದ ಶಿಕ್ಷಕರು ಕಠ್ಮಂಡುವಿನಲ್ಲಿ ಜಮಾಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.