ADVERTISEMENT

ಕೃಷಿ ಕಾಯ್ದೆಗೆ ಅಮೆರಿಕ ಬೆಂಬಲ;'ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವಕ್ಕೆ ಭೂಷಣ'

ಪಿಟಿಐ
Published 4 ಫೆಬ್ರುವರಿ 2021, 6:54 IST
Last Updated 4 ಫೆಬ್ರುವರಿ 2021, 6:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್:ಭಾರತ ಸರ್ಕಾರದ ನೂತನ ಕೃಷಿ ಕಾಯ್ದೆಗಳಿಗೆ ಬೆಂಬಲ ಸೂಚಿಸಿರುವ ಅಮೆರಿಕ, ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವಕ್ಕೆ ಭೂಷಣ ಎಂದಿದೆ.

ಶಾಂತಿಯುತ ಪ್ರತಿಭಟನೆಗಳು ಪ್ರವರ್ಧಮಾನ ಪ್ರಜಾಪ್ರಭುತ್ವದ ಲಕ್ಷಣ ಎಂದು ಉಲ್ಲೇಖಿಸಿರುವ ಅಮೆರಿಕ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯಗಳ ಹೂಡಿಕೆಗಳನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಹೇಳಿದೆ.

ಭಾರತದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಹಿನ್ನೆಲೆಯಲ್ಲಿ ಅಮೆರಿಕರದಿಂದ ಅಭಿಪ್ರಾಯ ವ್ಯಕ್ತವಾಗಿದೆ. ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗಿಸುತ್ತದೆ ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರರು ತಿಳಿಸಿದ್ದಾರೆ.

ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಭಾರತೀಯ ಸರ್ಕಾರ ತಂದಿರುವ ಸುಧಾರಣೆಗಳನ್ನು ಅಮೆರಿಕದ ಜೋ ಬೈಡನ್ ನೇತೃತ್ವದ ಹೊಸ ಆಡಳಿತವು ಸ್ವಾಗತಿಸಿದೆ ಎಂಬುದನ್ನು ಸೂಚಿಸುತ್ತಿದೆ.

ADVERTISEMENT

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧ ಉತ್ತರಿಸಿರುವ ಸ್ಟೇಟ್ ಡಿಪಾರ್ಟ್‌ಮೆಂಟ್, ಭಿನ್ನಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಎಂಬುದನ್ನು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.

ಶಾಂತಿಯುತ ಪ್ರತಿಭಟನೆಯು ಏಳಿಗೆ ಹೊಂದುತ್ತಿರುವ ಪ್ರಜಾಪ್ರಭುತ್ವದ ಲಕ್ಷಣವಾಗಿದ್ದು, ಭಾರತದ ಸುಪ್ರೀಂ ಕೋರ್ಟ್ ಸಹ ಇದನ್ನೇ ಉಲ್ಲೇಖಿಸಿದೆ ಎಂದು ತಿಳಿಸಿದರು.

ಏತನ್ಮಧ್ಯೆ, ಅಮೆರಿಕದ ಹಲವಾರು ಕಾನೂನುತಜ್ಞರು ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರೈತರ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ. ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಯ ವಿರುದ್ಧ ಕೈಗೊಂಡಿರುವ ಕ್ರಮಗಳಿಂದ ಕಳವಳಗೊಂಡಿದ್ದೇನೆ ಎಂದು ಅಮೆರಿಕ ಕಾಂಗ್ರೆಸ್‌ವುಮನ್ ಹ್ಯಾಲೆ ಸ್ಟೀವನ್ಸ್ ಹೇಳಿಕೆ ನೀಡಿದ್ದಾರೆ.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸೋದರ ಸೊಸೆ ಮೀನಾ ಹ್ಯಾರಿಸ್, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಹಲ್ಲೆಯಾಗಿದೆ. ಭಾರತದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಮತ್ತು ರೈತರ ಪ್ರತಿಭಟನೆಯ ವಿರುದ್ಧ ಅರೆಸೇನಾ ಪಡೆಗಳ ಹಿಂಸಾಚಾರದಿಂದ ನಾವೆಲ್ಲರೂ ಅಸಮಾಧಾನಗೊಂಡಿದ್ದೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.