ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಬರುವ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬ್ರಿಟನ್ ಸರ್ಕಾರ ಅಧಿಕೃತವಾಗಿ ತಿಳಿಸಿದೆ.
2021ರ ಗಣರಾಜ್ಯೋತ್ಸವ ದಿನಾಚರಣೆಗೆ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಯಾಗಿ ಬರಬೇಕಾಗಿತ್ತು. ಆದರೆ ಕೋವಿಡ್ ಪ್ರಕರಣಗಳು ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಪ್ರವಾಸವನ್ನು ರದ್ದುಗೊಳಿಸಿದ್ದರು.
ಬೋರಿಸ್ ಅವರ ಭೇಟಿ ಬ್ರಿಟನ್ಗೆ ಮಹತ್ವದ್ದಾಗಿದ್ದು, ಐರೋಪ್ಯ ಒಕ್ಕೂಟದಿಂದ ಹೊರ ಬಂದ ಬಳಿಕ ಭಾರತದ ಸಹಕಾರ ಬ್ರಿಟನ್ಗೆ ಅಗತ್ಯವಾಗಿದೆ ಎಂದು ಬ್ರಿಟನ್ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಐರೋಪ್ಯ ಒಕ್ಕೂಟದ ಜತೆಗಿನ ಸಂಬಂಧವನ್ನು ಬ್ರಿಟನ್ ಕಡಿದುಕೊಂಡ ಪರಿಣಾಮ 2021ರಿಂದ ಬ್ರಿಟನ್ನಲ್ಲಿ ಹೊಸ ನಿಯಮಗಳು ಜಾರಿಗೆ ಬಂದಿವೆ.
ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳು ಮತ್ತು ಬ್ರಿಟನ್ ನಡುವಣ ಮುಕ್ತ ಸಂಚಾರಕ್ಕೆ ಕಡಿವಾಣ ಬಿದ್ದಿದೆ. ಹಾಗೇ ವ್ಯಾಪಾರ ವಹಿವಾಟಿಗೆ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬ್ರಿಟನ್ ಮುಕ್ತ ವ್ಯಾಪಾರಕ್ಕೆ ತೆರೆದುಕೊಂಡಿರುವುದರಿಂದ ಭಾರತದ ಸಹಕಾರ ಅಗತ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.