ಕೀವ್: ರಷ್ಯಾದ ಆಕ್ರಮಣ ಭೀತಿಯಿಂದ ಉಕ್ರೇನ್ ತನ್ನ ನೆಲದ ರಕ್ಷಣೆಗೆ ಮಿಲಿ ಟರಿ ಮೀಸಲು ಪಡೆಗಳನ್ನು ಒಟ್ಟುಗೂಡಿಸುತ್ತಿದ್ದು, ರಷ್ಯಾದಲ್ಲಿರುವ ತನ್ನ ನಾಗರಿಕರಿಗೆ ತಕ್ಷಣ ದೇಶಕ್ಕೆ ವಾಪಸಾಗಲು ಸೂಚಿಸಿದೆ. ಅಲ್ಲದೆ, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ಇದು ಯುದ್ಧದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಅಮೆರಿಕ ಮತ್ತು ಯುರೋಪ್ ಒಕ್ಕೂಟದ ಸದಸ್ಯ ರಾಷ್ಟ್ರಗಳು ಹೇರಿರುವ ಕಠಿಣ ನಿರ್ಬಂಧಗಳನ್ನು ಧಿಕ್ಕರಿಸಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಬಂಡುಕೋರರ ಹಿಡಿತದಲ್ಲಿರುವಎರಡು ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ಸೇನಾಪಡೆಗಳನ್ನು ನಿಯೋಜಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದೇಶದ ಮಿಲಿಟರಿಯ 2 ಲಕ್ಷಕ್ಕೂ ಹೆಚ್ಚು ಮೀಸಲು ಸಿಬ್ಬಂದಿಗೆ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ. ಉಕ್ರೇನ್ನ ಭದ್ರತಾ ಮಂಡಳಿಯುಬುಧವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.
ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳು
ಉಕ್ರೇನ್ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಅಲ್ಲಿರುವ ಭಾರತೀಯ ವಿದ್ಯಾರ್ಥಿ ಗಳನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದ್ದು 242 ವಿದ್ಯಾರ್ಥಿಗಳು ಮಂಗಳವಾರ ಮಧ್ಯ ರಾತ್ರಿ ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸಬಹುದು ಎಂಬ ಭೀತಿಯಿಂದಾಗಿ ಉಕ್ರೇನ್ಮತ್ತು ಅದರ ಪಕ್ಕದ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯ ನಾಗರಿಕ ರನ್ನು ಕರೆತರುವ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ. ಉಕ್ರೇನ್ನ ಖಾರ್ಕಿವ್– ನವದೆಹಲಿ ನಡುವೆ ವಿಮಾನಗಳ ಸೇವೆ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.