ADVERTISEMENT

23ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಕಲ ಸಜ್ಜು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 8:35 IST
Last Updated 21 ಮಾರ್ಚ್ 2018, 8:35 IST
23ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಕಲ ಸಜ್ಜು
23ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಕಲ ಸಜ್ಜು   

ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್‌.ಅನುರಾಧಾ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಮುಖ್ಯ ಶಿಕ್ಷಕರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಮಾರ್ಚ್‌ 23ರಿಂದ ಏಪ್ರಿಲ್‌ 6ರ ವರೆಗೆ ಪರೀಕ್ಷೆ ನಡೆಯಲಿವೆ. ಜಿಲ್ಲೆಯ 277 ಶಾಲೆಗಳ 15,754 ಮಂದಿ ವಿದ್ಯಾರ್ಥಿಗಳು 57 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್‌. ಶಿವಣ್ಣರೆಡ್ಡಿ ಮಾತನಾಡಿ, ‘ಶಾಲೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ವಿತರಿಸುವ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳೆ ಬಗ್ಗೆ ಮಾಹಿತಿ ನೀಡಬೇಕು. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಲು ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಇದನ್ನೂ ಶಿಕ್ಷಕರು ತಿಳಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಾಂತಲಾ, ಚಂದ್ರಶೇಖರ್‌ ಬಾಬು, ವಿಷಯ ಪರಿವೀಕ್ಷಕ ರಾಮಕೃಷ್ಣಪ್ಪ ಇದ್ದರು.

ಪರೀಕ್ಷಾ ವೇಳಾ ಪಟ್ಟಿ

ಮಾರ್ಚ್‌ 23 ರಂದು ಪ್ರಥಮ ಭಾಷೆ ಕನ್ನಡ, 26ಕ್ಕೆ ಗಣಿತ, 28ಕ್ಕೆ ಇಂಗ್ಲೀಷ್, ಏಪ್ರಿಲ್‌ 2 ರಂದು ವಿಜ್ಞಾನ, 4 ರಂದು ಹಿಂದಿ, 6 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

15,754 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ

ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ 6 ಪರೀಕ್ಷಾ ಕೇಂದ್ರಗಳಲ್ಲಿ 2,659, ಚಿಕ್ಕಬಳ್ಳಾಪುರ ತಾಲ್ಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ 2,759, ಚಿಂತಾಮಣಿ ತಾಲ್ಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ 3,863, ಗೌರಿಬಿದನೂರು ತಾಲ್ಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಲ್ಲಿ 3,326, ಗುಡಿಬಂಡೆ ತಾಲ್ಲೂಕಿನ 3 ಕೇಂದ್ರಗಳಲ್ಲಿ 788, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 10 ಕೇಂದ್ರಗಳಲ್ಲಿ 2,359 ಸೇರಿ ಒಟ್ಟು 15,754 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

**
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾರದರ್ಶಕವಾಗಿ ನಡೆಸಲು ಇಲಾಖೆ ಸಿದ್ದವಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಹಳೆಯ ಪ್ರಶ್ನೆ ಪ್ರತಿಕೆಗಳನ್ನು ನೀಡಿ ಅನೇಕ ಪೂರ್ವ ಸಿದ್ದತಾ ಪರೀಕ್ಷೆಗಳನ್ನು ನಡೆಸಲಾಗಿದೆ.
– ಆರ್‌.ಶಿವಣ್ಣರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.