ದಳ ಅಧ್ಯಕ್ಷತೆ: ಪಟೇಲ್ಗೆ ಆಯ್ಕೆ ಅಧಿಕಾರ
ಬೆಂಗಳೂರು, ಮೇ 5– ರಾಜ್ಯ ಜನತಾದಳದ ಅಧ್ಯಕ್ಷ ಪದವಿಗೆ ಸರ್ವಸಮ್ಮತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಂಪುಟದ ಹಿರಿಯ ಸಚಿವರ ಸಭೆಯು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರಿಗೆ ಇಂದು ಇಲ್ಲಿ ಅಧಿಕಾರ ನೀಡಿತು.
ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ತಿಂಗಳು 10 ರಂದು ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ ಎಂದರು.
ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಬೇಡ ಎಂದು ಅಭಿಪ್ರಾಯಪಟ್ಟ ಸಭೆಯು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಅವರಿಗೆ ಬಿಟ್ಟಿದೆ ಎಂದು ಅವರು ಹೇಳಿದರು.
ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಅಸ್ತು
ನವದೆಹಲಿ, ಮೇ 5– ದೇವನಹಳ್ಳಿ ಅಂತರ
ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಒಪ್ಪಿಗೆ ಕೊಡಲಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಸಿ.ಎಂ.ಇಬ್ರಾಹಿಂ ಅವರು ಇಂದು ಇಲ್ಲಿ ತಿಳಿಸಿದರು. ವಿಮಾನ ನಿಲ್ದಾಣವನ್ನು ನಿರ್ಮಿಸಿದ ನಂತರ ಸ್ವಂತವಾಗಿ ನಿರ್ವಹಿಸಿ ಬಳಸಿ ವರ್ಗಾವಣೆ ಮಾಡಬೇಕೆಂಬ (ಬಿಒಟಿ) ಷರತ್ತಿನ ಅನ್ವಯ ಒಪ್ಪಿಗೆ ಕೊಡಲಾಗಿದೆ ಎಂದು ಅವರು ಹೇಳಿದರು.
ಈ ಬದಲಾವಣೆಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಜತೆಗೆ ಕರ್ನಾಟಕ ಸರ್ಕಾರ ಮತ್ತು ಉದ್ದೇಶಿತ ವಿಮಾನ ನಿಲ್ದಾಣ ಯೋಜನೆಯ ಗುತ್ತಿಗೆ ಪಡೆದಿರುವ ಟಾಟಾ ಸಂಸ್ಥೆಯು ಒಪ್ಪಿವೆ ಎಂದು ಅವರು ‘ಪ್ರಜಾವಾಣಿ’ಗೆ ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.