ಕರುಣಾನಿಧಿ ಜತೆ ಚರ್ಚೆ: ಚೆನ್ನೈಗೆ ಪಟೇಲ್
ಬೆಂಗಳೂರು, ಜುಲೈ 26– ಕಾಡುಗಳ್ಳ ವೀರಪ್ಪನ್ ಅಪಹರಿಸಿರುವ ಅರಣ್ಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿಸುವ ಸಂಬಂಧದಲ್ಲಿ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆಗೆ ಚರ್ಚಿಸಲು ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ, ಅರಣ್ಯ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಹಾಗೂ ಗೃಹ ಸಚಿವ ರೋಷನ್ ಬೇಗ್ ಅವರು ಚೆನ್ನೈಗೆ ತೆರಳಿದ್ದಾರೆ.
ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಸು ವುದು ಸದ್ಯ ಮುಖ್ಯವಾಗಿದ್ದು, ಎರಡೂ ರಾಜ್ಯಗಳು ಸೇರಿ ನಿಖರವಾದ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಇದಕ್ಕೂ ಮೊದಲು ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾರ್ತಾ ಸಚಿವ ಎಂ.ಸಿ. ನಾಣಯ್ಯ ತಿಳಿಸಿದರು.
ಕೃಷ್ಣಕಾಂತ್: ಉಪರಾಷ್ಟ್ರಪತಿ ಸ್ಥಾನಕ್ಕೆ ರಂಗ, ಕಾಂಗ್ರೆಸ್ ಒಮ್ಮತ ಅಭ್ಯರ್ಥಿ
ನವದೆಹಲಿ, ಜುಲೈ 26 (ಪಿಟಿಐ)– ಆಂಧ್ರ ಪ್ರದೇಶದ ರಾಜ್ಯಪಾಲ ಹಿರಿಯ ಗಾಂಧೀವಾದಿ ಕೃಷ್ಣಕಾಂತ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಸಂಯುಕ್ತ ರಂಗದ ಒಮ್ಮತದ ಅಭ್ಯರ್ಥಿಯಾಗಿದ್ದಾರೆ.
ಕೃಷ್ಣಕಾಂತ್ ಒಮ್ಮತದ ಅಭ್ಯರ್ಥಿ ಎಂದು ಕಾಂಗ್ರೆಸ್ ಅಧ್ಯಕ್ಷ ಸೀತಾರಾಂ ಕೇಸರಿ ಅವರು ಪ್ರಕಟಿಸಿದರು.
ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವ ಇರುವ ಕೃಷ್ಣಕಾಂತ್ ಅವರಿಗೆ ಬೆಂಬಲ ನೀಡುವಂತೆ ಪ್ರಧಾನಿ ಐ.ಕೆ. ಗುಜ್ರಾಲ್ ಅವರು ವಿರೋಧಪಕ್ಷಗಳಿಗೆ ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.