ಕೌಲ್ ರಾಜೀನಾಮೆಗೆ ರಾಷ್ಟ್ರಪತಿ ಸಲಹೆ
ನವದೆಹಲಿ, ಏ. 20 (ಪಿಟಿಐ)– ಸರ್ಕಾರಿ ವಸತಿ ಹಗರಣದಲ್ಲಿ ಆರೋಪಿ ಎಂದು ಗುರುತಿಸಲಾಗಿರುವ ಕೇಂದ್ರದ ಮಾಜಿ ನಗರಾಭಿವೃದ್ಧಿ ಸಚಿವೆ ಮತ್ತು ಈಗ ಹಿಮಾಚಲ ಪ್ರದೇಶದ ರಾಜ್ಯಪಾಲೆಯಾಗಿರುವ ಶೀಲಾ ಕೌಲ್ ಅವರು ವಿಳಂಬ ಮಾಡದೆ ರಾಜೀನಾಮೆ ನೀಡುವುದು ಉತ್ತಮ ಎಂದು ರಾಷ್ಟ್ರಪತಿ ಡಾ. ಶಂಕರ ದಯಾಳ್ ಶರ್ಮಾ ಇಂದು ರಾತ್ರಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸಂವಿಧಾನದ ಘನತೆಯನ್ನು ಎತ್ತಿಹಿಡಿಯಲು ಕೌಲ್ ಅವರು ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಡಾ. ಶರ್ಮಾ ಅವರು ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರಿಗೆ ತಿಳಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪತ್ರಿಕಾ ಪ್ರಕಟಣೆ ತಿಳಿಸಿದೆ.
‘ಬಸವದಳ ಚಳವಳಿ ತಾತ್ಕಾಲಿಕ ಸ್ಥಗಿತ’
ಬೆಂಗಳೂರು, ಏ. 20– ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಬಸವೇಶ್ವರ ವಿಶ್ವವಿದ್ಯಾಲಯ ಎಂದು ಪುನರ್ ನಾಮಕರಣ ಮಾಡುವಂತೆ ಒತ್ತಾಯಿಸಿ ನಡೆಸುತ್ತಿರುವ ಚಳವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಷ್ಟ್ರೀಯ ಬಸವದಳ ನಿರ್ಧರಿಸಿದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಎಂ.ಪಿ.ಪ್ರಕಾಶ್ ಇಂದು ಇಲ್ಲಿ ಪ್ರಕಟಿಸಿದರು.
ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಪುನರ್ ನಾಮಕರಣ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಚಳವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಸವ ದಳ ಒಪ್ಪಿಕೊಂಡಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.