
25 ವರ್ಷಗಳ ಹಿಂದೆ ಈ ದಿನ
‘ಗಡಿ ವಿವಾದ ಚರ್ಚೆಯಿಂದ ಪರಿಹಾರ’
ಬೆಂಗಳೂರು, ನ. 24– ‘ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು’ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರು, ಇಂದು ಇಲ್ಲಿ ಅಭಿಪ್ರಾಯಪಟ್ಟರು. ಸಹಕಾರಿಗಳ ಸಮಾವೇಶ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಅವರೊಂದಿಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು’ ಎಂದರು. ಈ ವಿವಾದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ನಂತರ ಕರೆಯುವ ಸಾಧ್ಯತೆ ಇದೆ ಎಂದರು.
‘ಅಗತ್ಯಬಿದ್ದರೆ ಸಂಪುಟ ವಿಸ್ತರಣೆ’
ನವದೆಹಲಿ, ನ. 24– ಕರ್ನಾಟಕದ ಸಚಿವರ ಸಾಧನೆಗಳ ಸಮೀಕ್ಷೆಯ ನಂತರ ಅಗತ್ಯ ಕಂಡುಬಂದರೆ ಸಂಪುಟ ವಿಸ್ತರಣೆ ನಡೆಯಬಹುದು ಎಂದು ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಂ ನಬೀ ಆಜಾದ್ ಇಂದು ಹೇಳಿದರು. ‘ರಾಜ್ಕುಮಾರ್ ಅಪಹರಣದ ಇತ್ತೀಚಿನ ಮೂರು ತಿಂಗಳ ಅವಧಿಯನ್ನು ಹೊರತುಪಡಿಸಿದರೆ ಕರ್ನಾಟಕ ಸರ್ಕಾರದ ಒಟ್ಟಾರೆ ಸಾಧನೆ ಉತ್ತಮವಾಗಿದೆ. ಪ್ರತಿಯೊಂದು ಖಾತೆಯ ಸಾಧನೆಯ ಪ್ರತ್ಯೇಕ ಸಮೀಕ್ಷೆ ಮೂಲಕ ಸಚಿವರ ಅರ್ಹತೆ–ಸಾಮರ್ಥ್ಯಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.