ಶಾಸನ ಸಭೆಗಳಲ್ಲಿ ಮೀಸಲು ಮಹಿಳಾ ಹೋರಾಟಕ್ಕೆ ಕರೆ
ಬೆಂಗಳೂರು, ಡಿ. 11– ‘ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಯವರನ್ನು ಒತ್ತಾಯಿಸಿ, ಇದಕ್ಕೆ ಮಣಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸಿ’ ಎಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರು ಇಂದು ಇಲ್ಲಿ ಜನತಾ ದಳದ ಮಹಿಳಾ ಸಮಾವೇಶದಲ್ಲಿ ಕರೆ ನೀಡಿದರು.
ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ 30ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಲು ಸಣ್ಣ ಮತ್ತು ಮಧ್ಯಮ ನೀರಾವರಿ ಸಚಿವೆ ಲೀಲಾದೇವಿ ಪ್ರಸಾದ್ ನೇತೃತ್ವದಲ್ಲಿ ನಿಯೋಗವೊಂದು ದೆಹಲಿಗೆ ತೆರಳಿ, ಪ್ರಸಕ್ತ ಅಧಿವೇಶನದಲ್ಲಿಯೇ ಮೀಸಲಾತಿಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಯವರ ಮೇಲೆ ಒತ್ತಡ ಹೇರಲಿದೆ ಎಂದು ಅವರು ಪ್ರಕಟಿಸಿದರು.
ಟೆಲಿಕಾಂ ಹಗರಣ ಮುರಿದುಬಿದ್ದ ಮಾತುಕತೆ
ನವದೆಹಲಿ, ಡಿ. 11 (ಯುಎನ್ಐ)– ಟೆಲಿಕಾಂ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿರೋಧ ಪಕ್ಷಗಳು ತಮ್ಮ ನಿಲುವಿಗೆ ಅಂಟಿಕೊಂಡಿದ್ದರಿಂದ, ಇಂದು ರಾತ್ರಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಮಸ್ಯೆಗೆ ಯಾವುದೇ ಪರಿಹಾರ ಕಾಣದೆ ಬಿಕ್ಕಟ್ಟು ಹಾಗೆಯೇ ಮುಂದುವರಿದಿದೆ. ಇದರಿಂದಾಗಿ ಸಂಸತ್ತಿನ ಉಭಯ ಸದನಗಳಲ್ಲಿ ನಾಳಿನ ಕಲಾಪವೂ ಸುಗಮವಾಗಿ ನಡೆಯುವ ಸಾಧ್ಯತೆ ಕಡಿಮೆ.
ದೂರವಾಣಿಗೆ ಪರವಾನಗಿ ನೀಡುವುದನ್ನು ಕೆಲ ಕಾಲ ಮುಂದೂಡಲೂ ಸರ್ಕಾರ ಸಿದ್ಧವಿಲ್ಲದಿರುವುದರಿಂದ ಮಾತುಕತೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.