ಶೇ 80 ಮೀಸಲಿಗೆ ಮಸೂದೆ
ಬೆಂಗಳೂರು, ಆ. 5– ಚಿನ್ನಪ್ಪರೆಡ್ಡಿ ವರದಿಯಲ್ಲಿ ಕೆಲವೊಂದು ಮಾರ್ಪಾಡುಗಳೊಂದಿಗೆ ಹಿಂದುಳಿದ ವರ್ಗಗಳಿಗೆ ಶೇ 80ರಷ್ಟು ಮೀಸಲು (ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಶೇ 23ರಷ್ಟು ಸೇರಿದಂತೆ) ಸೌಲಭ್ಯ ಕಲ್ಪಿಸುವ ನೀತಿಯನ್ನು ಜಾರಿಗೆ ತರುವ ಸಲುವಾಗಿ ರಾಜ್ಯ ಸರ್ಕಾರ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ.
ಬೆಳಿಗ್ಗೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ ಮೀಸಲು ನೀತಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಈ ತೀರ್ಮಾನಕ್ಕೆ ಬರಲಾಯಿತು.
ಮುಂಬೈ ಸ್ಫೋಟ ಆರೋಪಿ ಬಂಧನ
ನವದೆಹಲಿ, ಆ. 5 (ಪಿಟಿಐ, ಯುಎನ್ಐ)– ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಟೈಗರ್ ಮೆಮನ್ನ ಸಹೋದರ ಯಾಕುಬ್ ಅಬ್ದುಲ್ ರಜಾಕ್ ಮೆಮನ್ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಬಂಧಿಸಿತು. ಗೃಹ ಸಚಿವ ಎಸ್.ಬಿ. ಚವಾಣ್ ಸಂಸತ್ತಿನ ಉಭಯ ಸದನಗಳಲ್ಲಿಯೂ ಈ ವಿಷಯ ತಿಳಿಸಿದರು. ಈತನಿಂದ ವಶಪಡಿಸಿಕೊಂಡ ಆಕ್ಷೇಪಾರ್ಹ ದಾಖಲೆಗಳಿಂದಾಗಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪಾಕಿಸ್ತಾನದ ಕೈವಾಡ ಇರುವುದು ಸಂದಿಗ್ದಾತೀತವಾಗಿ ಸಾಬೀತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.