ವೈದ್ಯ ಸೀಟು ಹಂಚಿಕೆಗೆ ಮತ್ತೆ ಸಂದರ್ಶನ ಖಚಿತ
ಬೆಂಗಳೂರು, ಆಗಸ್ಟ್ 30– ಭಾರತೀಯ ವೈದ್ಯಕೀಯ ಮಂಡಲಿಯು ನಿಗದಿಪಡಿಸಿರುವ ಸೀಟುಗಳ ಪ್ರಮಾಣಕ್ಕೆ ಅನುಗುಣವಾಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನೀಡಬೇಕೆಂದು ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವು (ಸಿಇಟಿ) ಸೀಟು ಹಂಚಿಕೆಗೆ ಮರು ಸಂದರ್ಶನ ನಡೆಸಲಿದೆ.
ಉನ್ನತ ಶಿಕ್ಷಣ ಹಾಗೂ ಕಾನೂನು ಇಲಾಖೆಯ ಅಧಿಕಾರಿಗಳ ಜತೆಗೆ ಚರ್ಚಿಸಿದ ನಂತರ ಭೇಟಿಯಾದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಎಂ. ಶಂಕರ ನಾಯ್ಕ್ ಅವರು, ನ್ಯಾಯಾಲಯದ ಆದೇಶ ಜಾರಿಗೊಳಿಸದೆ ಅನ್ಯ ಮಾರ್ಗವೇ ಇಲ್ಲ ಎಂದರು.
ಸಂಬಂಧ ವೃದ್ಧಿಗೆ ಪಾಕ್ ಜತೆ ಗುಜ್ರಾಲ್ ಚರ್ಚೆ
ಶಾಂತಿನಿಕೇತನ, ಆಗಸ್ಟ್ 30 (ಪಿಟಿಐ)– ಭಾರತ ಮತ್ತು ಪಾಕಿಸ್ತಾನಗಳ ನಡುವೆ ಮುಂದಿನ ತಿಂಗಳು ನವದೆಹಲಿಯಲ್ಲಿ ನಡೆಯುವ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆ, ದ್ವಿಪಕ್ಷೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂಬ ಆಶಯವನ್ನು ಪ್ರಧಾನಿ ಐ.ಕೆ. ಗುಜ್ರಾಲ್ ಇಂದು ಇಲ್ಲಿ ವ್ಯಕ್ತಪಡಿಸಿದರು.
ಭಾರತ ಪಾಕ್ ಸಂಬಂಧದ ಬಗ್ಗೆ ಮುಂದಿನ ತಿಂಗಳು ನ್ಯೂಯಾರ್ಕ್ನಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಪ್ರಕಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.