ರಾಜ್ಯ ಸರ್ಕಾರದ ಆಜ್ಞೆಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ, ಜ. 15– ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ರಾಜ್ಯದ ಹೊರಗಿನ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದನ್ನು ನಿಷೇಧಿಸಿ ಕರ್ನಾಟಕ ಸರ್ಕಾರವು 1995ರ ಮೇ 19ರಂದು ಹೊರಡಿಸಿದ್ದ ಆಜ್ಞೆಯನ್ನು ಮುಂದಿನ ಆದೇಶ ಹೊರಡಿಸುವವರೆಗೆ ಜಾರಿಗೆ ತರದಂತೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಆದರೆ, ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಇಂತಹ ಶಿಕ್ಷಣ ಸಂಸ್ಥೆಗಳು ಪ್ರವೇಶ ನೀಡುವಾಗ ಅರ್ಹತೆಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕಾಗಿದ್ದರೆ, ಸಂಬಂಧಪಟ್ಟ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಅಥವಾ ಪದವಿಪೂರ್ವ ಶಿಕ್ಷಣವನ್ನು ಕರ್ನಾಟಕದಲ್ಲಿಯೇ ಮಾಡಿರಬೇಕೆಂದು ಸರ್ಕಾರದ ಆಜ್ಞೆಯಲ್ಲಿ ಷರತ್ತು ವಿಧಿಸಲಾಗಿದೆ.
ಗುಂಡಿನ ಕಾಳಗ: ಮೂವರು ಡಕಾಯಿತರ ಸಾವು
ಬೀದರ್, ಜ. 15– ಬಸವಕಲ್ಯಾಣದ ಚಂಡಕಾಪುರ ಸಮೀಪದ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಗೊರಠಾಳ ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟುಕೊಂಡಿದ್ದ ದರೋಡೆಕೋರರು ಮತ್ತು ಪೊಲೀಸರ ಮಧ್ಯೆ ಇಂದು ಮಧ್ಯಾಹ್ನ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ದರೋಡೆಕೋರರು ಮೃತಪಟ್ಟು ಡಿಎಸ್ಪಿ ಮತ್ತು ಇನ್ಸ್ಪೆಕ್ಟರ್ ಸೇರಿದಂತೆ 5 ಜನರಿಗೆ ಗಾಯಗಳಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.