ರಾಜ್ಯದಲ್ಲೂ ‘ಎಸ್ಮಾ’ ಜಾರಿ: ಲಾರಿ ಮುಷ್ಕರ ನಿಷೇಧ
ಬೆಂಗಳೂರು, ಏ.5– ಲಾರಿ ಮುಷ್ಕರ ನಿಯಂತ್ರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಅದನ್ನು ಅಕ್ರಮ ಎಂದು ಸಾರಿರುವುದರ ಜತೆಗೇ ಸರಕು ಸಾಗಣೆಯನ್ನು ಅಗತ್ಯ ಸೇವಾ ನಿರ್ವಹಣೆ ಕಾಯ್ದೆ (ಎಸ್ಮಾ) ಅಡಿ ತಂದಿದೆ.
ಸರ್ಕಾರದ ನಿರ್ಧಾರವನ್ನು ಉಲ್ಲಂಘಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುವ ಸರಕು ಸಾಗಣೆ ವಾಹನಗಳ ಮಾಲಿಕರ ವಿರುದ್ಧ ಈ ಕಾಯ್ದೆ ಅನ್ವಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಕಮಿಷನರ್ ಸುಭಾಷ್ ಭರಣಿ ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶ ಉಲ್ಲಂಘಿಸಿ ಮುಷ್ಕರದಲ್ಲಿ ತೊಡಗುವ, ಮುಂದುವರಿಸುವ ವಾಹನಗಳ ಮಾಲಿಕರಿಗೆ ಒಂದು ವರ್ಷ ಜೈಲು ಶಿಕ್ಷೆ ಅಥವಾ ಎರಡು ಸಾವಿರ ರೂಪಾಯಿ ದಂಡ ಅಥವಾ ಎರಡನ್ನೂ ಒಟ್ಟಿಗೇ ವಿಧಿಸುವುದಕ್ಕೆ ಈ ಕಾಯ್ದೆಯಲ್ಲಿ ಅವಕಾಶವಿದೆ.
‘ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ತೆಗೆದರೆ ಪರಿಹಾರ ಸಾಧ್ಯ’
ನವದೆಹಲಿ, ಏ.5 (ಯುಎನ್ಐ)– ‘ಎಚ್.ಡಿ.ದೇವೇಗೌಡರನ್ನು ಪ್ರಧಾನಿ ಪಟ್ಟದಿಂದ ತೆಗೆದು ಹಾಕಿದರೆ ಮಾತ್ರ ಪ್ರಸಕ್ತ ರಾಜಕೀಯ ಬಿಕ್ಕಟ್ಟಿಗೆ ಪರಿಹಾರ ಸಾಧ್ಯ’ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಅವರು ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರಿಗೆ ಹೇಳುವ ಮೂಲಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.
ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೊಲೋ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದರು. ತಮ್ಮ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಅವರು ತಳೆದಿರುವ ಮನೋಭಾವದ ಬಗ್ಗೆ ಕೇಸರಿ ದೂರಿದರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.