ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್ನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದು ಶ್ಲಾಘನೀಯ. ಪ್ರೀತಿ, ಪ್ರೇಮ, ಕೌಟುಂಬಿಕ ಕಲಹಗಳಿಂದ ಈ ಹಿಂದೆಯೂ ಅನೇಕ ಅಮಾಯಕ ಯುವತಿಯರು, ಮಹಿಳೆಯರು ಇಂತಹ ವಿಕೃತ ಕೃತ್ಯಕ್ಕೆ ಬಲಿಯಾಗಿದ್ದಾರೆ. ಒಬ್ಬಿಬ್ಬರು ಮಾಡುವ ಇಂತಹ ಕೃತ್ಯಗಳು ಇಡೀ ಪುರುಷ ಸಮುದಾಯವೇ ತಲೆ ತಗ್ಗಿಸುವಂತೆ ಮಾಡುತ್ತವೆ.
ನಾಗೇಶ್ನಂತಹ ವಿಕೃತ ಮನಃಸ್ಥಿತಿಯವರಿಗೆ ತಕ್ಕ ಶಿಕ್ಷೆಯಾಗಬೇಕು. ಕಠಿಣ ಶಿಕ್ಷೆಯಾಗುವಂತಹ ಕಾನೂನುಗಳನ್ನು ಜಾರಿಗೊಳಿಸಬೇಕಾಗಿದೆ. ಆಗಮಾತ್ರ ಆ್ಯಸಿಡ್ ದಾಳಿ ಪ್ರಕರಣಗಳು ಕೊನೆಯಾಗಲಿವೆ. ಯಥಾಪ್ರಕಾರ ಎಲ್ಲ ಅಪರಾಧ ಪ್ರಕರಣಗಳಂತೆ ಆ್ಯಸಿಡ್ ದಾಳಿಯನ್ನೂ ಪರಿಗಣಿಸಿದರೆ, ಇಂತಹ ವಿಕೃತಗಳು ಮುಂದುವರಿಯುತ್ತವೆ. ಆ್ಯಸಿಡ್ ದಾಳಿ ಸಂತ್ರಸ್ತರಿಗೆ ನೀಡುತ್ತಿರುವ ಮಾಸಿಕ ಪಿಂಚಣಿ ಮೊತ್ತವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿಸಿದ್ದಾರೆ. ಅಲ್ಲದೆ, ಅವರಿಗೆ ನಿವೇಶನ, ಮನೆ ಮತ್ತು ಸ್ವಯಂ ಉದ್ಯೋಗಕ್ಕೆ ನೆರವು ನೀಡುವ ಬಗ್ಗೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ನೊಂದವರ ಜತೆ ಸರ್ಕಾರ ಸದಾ ನಿಲ್ಲುತ್ತದೆ ಎಂದು ಹೇಳುತ್ತಿದ್ದ ಬೊಮ್ಮಾಯಿ, ಆ್ಯಸಿಡ್ ಸಂತ್ರಸ್ತೆಯರ ನೆರವಿಗೆ ನಿಲ್ಲುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
-ರತ್ನಾ ಮೂರ್ತಿ, ತುಮಕೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.