ಕಾಲೇಜುಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಯೂಟ ನೀಡಬೇಕೆಂದು ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಅಭಿಯಾನ ಆರಂಭಿಸಿದ್ದಾರೆ. ಕಾಲೇಜುಗಳು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇವೆ. ಅಲ್ಲಿಗೆ ಬರುವ ಬಹುಪಾಲು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರೇ ಆಗಿದ್ದಾರೆ. ಅದರಲ್ಲೂ ಸರ್ಕಾರಿ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಬಡತನದ ಹಿನ್ನೆಲೆಯವರಾಗಿರುತ್ತಾರೆ.
ಬೆಳಿಗ್ಗೆ ಮನೆಯಲ್ಲಿ ಆಹಾರ ತಿಂದು ಬಂದರೆ ಮತ್ತೆ ಮನೆಗೇ ಹೋಗಿ ತಿನ್ನಬೇಕಾದ ಪರಿಸ್ಥಿತಿ ಇರುತ್ತದೆ. ಕೆಲವೊಮ್ಮೆ ದಿನಪೂರ್ತಿ ಹಸಿದುಕೊಂಡು ಇರುವ ಸಂದರ್ಭಗಳೂ ಇಲ್ಲದಿಲ್ಲ. ಪರಿಣಾಮವಾಗಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯ ಹದಗೆಡುತ್ತದೆ. ಹಸಿವಿನಿಂದ ತರಗತಿಯಲ್ಲಿ ಕುಳಿತು ಪಾಠ ಕೇಳಲೂ ಆಗುವುದಿಲ್ಲ. ಎಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೂ ಹಸಿದಿರುವೆಡೆ ಅದು ಪರಿಣಾಮ ಬೀರದು. ಅಕ್ಷರದಷ್ಟೇ ಅನ್ನಕ್ಕೂ ಮಹತ್ವ ನೀಡಿ, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರಬೇಕು. ಆ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಬೇಕು.
ಮಾರುತೇಶ ಕೆ. ಚಿಕ್ಕತೇಕಲವಟ್ಟಿ, ಹೊಸದುರ್ಗ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.