ADVERTISEMENT

ವಾಚಕರ ವಾಣಿ | ಕೋವಿಡ್‌ ನಿರ್ವಹಣೆ: ಶ್ವೇತಪತ್ರ ಹೊರಡಿಸಲಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 19:30 IST
Last Updated 26 ಜುಲೈ 2020, 19:30 IST

ಕೋವಿಡ್ ನಿರ್ವಹಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರವು ನಾಲ್ಕು ತಿಂಗಳಿನಲ್ಲಿ ಖರ್ಚು ಮಾಡಿರುವ ₹ 4,167 ಕೋಟಿ ಪೈಕಿ ₹ 2,000 ಕೋಟಿ ಅವ್ಯವಹಾರ ನಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಪಡಿಸಿದ್ದಾರೆ. ಹಲವಾರು ದಿನಗಳಿಂದ ಈ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಕೆಲವು ಸಚಿವರು ಕೋವಿಡ್ ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲವೆಂದು ಹೇಳುತ್ತಾ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಲೇ ಬಂದಿದ್ದರು. ಆದರೆ ಸಿದ್ದರಾಮಯ್ಯಅವರು ದಾಖಲೆ ಸಮೇತ ಆರೋಪ ಮಾಡಿರುವುದರಿಂದ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲ್ಲವಾದರೆ ಸರ್ಕಾರದ ನಡೆಯನ್ನು ಜನ ಅನುಮಾನದ ದೃಷ್ಟಿಯಿಂದ ನೋಡಲು ವಿಪುಲ ಅವಕಾಶಗಳಿವೆ.

ರಾಜ್ಯದಲ್ಲಿ ಪ್ರತಿದಿನ ಸಾವಿರಾರು ಜನ ಸೋಂಕಿಗೆ ಒಳಗಾಗುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯನ್ನು ಯಾರೇ ಆಗಲಿ ದುರುಪಯೋಗ ಮಾಡಿಕೊಂಡಿದ್ದರೆ ಅದು ಸತ್ತವರ ಮನೆಯ ಗಳವನ್ನೇ ಕದ್ದೊಯ್ದಂತೆ. ಇಡೀ ವ್ಯವಹಾರದ ಬಗ್ಗೆ ಮುಖ್ಯಮಂತ್ರಿ ಸ್ವಯಂಪ್ರೇರಿತರಾಗಿ ಶ್ವೇತಪತ್ರ ಹೊರಡಿಸಬೇಕು ಅಥವಾ ವಿಧಾನಸಭೆಯ ಅಧಿವೇಶನ ಕರೆದು ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲಿ.

-ಕೆ.ವಿ.ವಾಸು, ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.