ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ, ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ ಮಾರಾಟ ಮಾಡಬಹುದು ಎಂಬ ಉದ್ದೇಶದ ಎಪಿಎಂಸಿ– 2020 ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ಮೇಲೆ ನಮ್ಮ ರಾಜ್ಯದಲ್ಲಿ ಎಪಿಎಂಸಿಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿವೆ. ಎಪಿಎಂಸಿಗಳಿಗೆ ಆವಕವಾಗುವ ಕೃಷಿ ಉತ್ಪನ್ನಗಳ ಪ್ರಮಾಣ 2020- 21ರಲ್ಲಿ ಸರಾಸರಿ ಶೇ 30ರಿಂದ 40ರಷ್ಟು ಕಡಿಮೆಯಾಗಿದೆ. ಎರಡನೆಯದಾಗಿ, ಎಪಿಎಂಸಿಗಳಲ್ಲಿ ವಹಿವಾಟು ಕಡಿಮೆಯಾಗುತ್ತಿರುವ ಕಾರಣದಿಂದ ತಮ್ಮ ಸಿಬ್ಬಂದಿಗೆ ಸಂಬಳ ನೀಡುವುದು ಅವಕ್ಕೆ ಕಷ್ಟವಾಗುತ್ತಿದೆ. ಮೂರನೆಯದಾಗಿ, ಎಪಿಎಂಸಿಗಳು ಮುಚ್ಚಿಹೋದರೆ ರೈತರು ಲಾಭಕೋರ ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಬೇಕಾಗುತ್ತದೆ ಮತ್ತು ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಎಂಬುದು ಗಗನಕುಸುಮವಾಗಿ ಬಿಡುತ್ತದೆ.
ಕನಿಷ್ಠ ಬೆಂಬಲ ಬೆಲೆಯ ವಿಕೃತ ಅನುಷ್ಠಾನದಿಂದಾಗಿ ಕರ್ನಾಟಕದ ರೈತರು ಸಾವಿರಾರು ಕೋಟಿ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹೋರಾಟವು ಇಂದು ದೇಶದ ಸರಿಸುಮಾರು 22ರಿಂದ 25 ರಾಜ್ಯಗಳಿಗೆ ಹಬ್ಬಿದೆ. ಈಗಲಾದರೂ ಸರ್ಕಾರ ಕಣ್ಣು ತೆರೆದು, ಸ್ಥಿತಿ ಕೈಮೀರುವ ಮೊದಲು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ.
- ಟಿ.ಆರ್.ಚಂದ್ರಶೇಖರ,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.