ADVERTISEMENT

ವಾಚಕರ ವಾಣಿ: ಹೊಸ ಯೋಜನೆಯ ಅಗತ್ಯವಿತ್ತೇ?

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 19:31 IST
Last Updated 15 ಡಿಸೆಂಬರ್ 2022, 19:31 IST

ಸರ್ಕಾರದ ಮಹತ್ವಾಕಾಂಕ್ಷಿ ಆರೋಗ್ಯ ಯೋಜನೆ ‘ನಮ್ಮ ಕ್ಲಿನಿಕ್’ ಅನ್ನು ಸ್ವಾಗತಿಸಬೇಕೋ ಬೇಡವೋ ಎಂಬುದು ಗೊತ್ತಾಗುತ್ತಿಲ್ಲ. ಏಕೆಂದರೆ ಈಗ ಇರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗಳ ಪಾಡು ಮುಂದೇನು ಎಂಬ ಪ್ರಶ್ನೆ ಕಾಡತೊಡಗಿದೆ. ರಾಜ್ಯದಾದ್ಯಂತ ಹೋಬಳಿಗೆ ಒಂದು, ಎರಡು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ವೈದ್ಯರ ಕೊರತೆ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿರುವುದು, ಔಷಧಿಗಳ ಕೊರತೆ, ವೈದ್ಯಕೀಯ ಪರಿಕರಗಳ ಕೊರತೆ, ಆಂಬುಲೆನ್ಸ್ ಸೇವೆಯಲ್ಲಿ ತೊಡಕು ಹೀಗೆ ನಾನಾ ಸಮಸ್ಯೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ತಾಂಡವವಾಡುತ್ತಿವೆ.

ಅಂತಹುದರಲ್ಲಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ, ಹೊಸದಾಗಿ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಿಕೊಂಡು ಮತ್ತೊಂದು ಸರ್ಕಾರಿ ಆಸ್ಪತ್ರೆ ‘ನಮ್ಮ ಕ್ಲಿನಿಕ್’ ಆರಂಭಿಸುವ ಅಗತ್ಯವಿತ್ತೇ? ಇರುವ ಆಸ್ಪತ್ರೆಗಳನ್ನೇ ಅಭಿವೃದ್ಧಿಪಡಿಸಿ ಮೇಲ್ದರ್ಜೆಗೆ ಏರಿಸಬಹುದಿತ್ತು.

ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿ ಶುರುವಾದ ‘ಇಂದಿರಾ ಕ್ಯಾಂಟೀನ್’ಗಳು ಸರ್ಕಾರದ ನಿರ್ಲಕ್ಷ್ಯಕ್ಕೆ ತುತ್ತಾಗಿ ಈಗ ಸದ್ದಿಲ್ಲದೆ ಬಾಗಿಲು ಮುಚ್ಚುತ್ತಿವೆ. ಇದೇ ರೀತಿ, ಮುಂದೆ ಬೇರೊಂದು ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದು, ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಿ, ಶಾಶ್ವತವಾಗಿ ಸ್ಥಗಿತಗೊಳಿಸಬಹುದಲ್ಲವೇ? ಯಾವುದೇ ಪಕ್ಷದ ನೇತೃತ್ವದ ಸರ್ಕಾರವಿರಲಿ, ಶಾಶ್ವತವಾಗಿ ಉಳಿಯುವಂತಹ ಹಾಗೂ ಜನರಿಗೆ ನೆರವಾಗುವಂತಹ ಯೋಜನೆಗಳನ್ನು ಜಾರಿಗೆ ತರುವುದು ಉತ್ತಮ.

ADVERTISEMENT

⇒ಶಿವಶಂಕರ ಎಸ್.,ಮುತ್ತರಾಯನಹಳ್ಳಿ, ಮಧುಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.