ಕಡಲೆಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿ ತಿಂಗಳುಗಳೇ ಕಳೆದಿವೆ. ಅದರ ಖರೀದಿಗೆ ಸರ್ಕಾರ ಯಾವಾಗ ಕೇಂದ್ರಗಳನ್ನು ಪ್ರಾರಂಭಿಸುತ್ತದೆ ಎಂದು ರೈತರು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಸ್ಪಷ್ಟ ಉತ್ತರವಿಲ್ಲ. ಮುಕ್ತ ಮಾರುಕಟ್ಟೆಯಲ್ಲಿ ಕಡಲೆ ಧಾರಣೆ ದಿನೇದಿನೇ ಕುಸಿಯುತ್ತಿದೆ. ಇದರಿಂದ ರೈತರು ಹಣೆಗೆ ಕೈ ಹಚ್ಚಿ ಕುಳಿತುಕೊಳ್ಳುವಂತಾಗಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವಿಚಾರಿಸಿದರೆ, ತೊಗರಿ ಖರೀದಿ ನಂತರ ಖರೀದಿಸುತ್ತೇವೆ ಎಂದು ಹೇಳುತ್ತಾರೆ. ಈ ವರ್ಷ ಕಡಲೆ ಬೆಳೆಯಲ್ಲಿ ದಾಖಲೆ ಇಳುವರಿ ಕಂಡಿದ್ದರೂ ‘ದೇವರು ವರ ಕೊಟ್ಟರೂ ಪೂಜಾರಿ ಕೊಡ’ ಎಂಬಂಥ ಸ್ಥಿತಿ ರೈತರದ್ದಾಗಿದೆ. ಸರ್ಕಾರವು ಏಕಕಾಲಕ್ಕೆ ತೊಗರಿ ಮತ್ತು ಕಡಲೆ ಖರೀದಿ ಕೇಂದ್ರಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಿ, ರೈತರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.
-ವಿ.ಜಿ.ಇನಾಮದಾರ, ಸಾರವಾಡ, ವಿಜಯಪುರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.