ಕೆಲವೇ ದಿನಗಳಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಕಳೆದ ಕೆಲವು ವರ್ಷಗಳಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಹೆಸರಿಗೆ ಮಾತ್ರ ಎಂಬಂತಾಗಿದೆ.
ಈ ಬಾರಿಯ ಅಧಿವೇಶನದಲ್ಲಾದರೂ ಈ ಅಪವಾದವನ್ನು ಹೋಗಲಾಡಿಸಲು ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಬೇಕು.
ಸರ್ಕಾರದ ಕನಿಷ್ಠ ಹತ್ತು ಇಲಾಖೆಗಳನ್ನಾದರೂ ಬೆಳಗಾವಿಗೆ ಸ್ಥಳಾಂತರ ಮಾಡುವ ಬಗ್ಗೆ ಚರ್ಚೆಯಾಗಬೇಕು. ಉತ್ತರ ಕರ್ನಾಟಕದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಜನರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಗಳಾಗಬೇಕು. ಮಹದಾಯಿ ವಿಚಾರ, ಆಲಮಟ್ಟಿ ಅಣೆಕಟ್ಟೆಯ ಎತ್ತರ, ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆಯೂ ಚಿಂತನ ಮಂಥನ ನಡೆಯಬೇಕು. ಅದಕ್ಕಾಗಿ ಉತ್ತರ ಕರ್ನಾಟಕ ಭಾಗದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಮತ್ತು ಪಕ್ಷಾತೀತವಾಗಿ ಚರ್ಚೆ ನಡೆಸಬೇಕು.
ಬೆಳಗಾವಿ ಅಧಿವೇಶನವನ್ನು ರಾಜಕೀಯ ಆಟವಾಗಿಸಿ, ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಈ ಬಾರಿಯ ಅಧಿವೇಶನವೂ ವ್ಯರ್ಥವಾಗುತ್ತದೆ. ಅದಕ್ಕೆ ಅವಕಾಶ ನೀಡದೆ, ಅಧಿವೇಶನ ಯಶಸ್ವಿಯಾಗಲು ವಿರೋಧಪಕ್ಷವಾದ ಬಿಜೆಪಿಯೂ ಸಹಕಾರ ನೀಡಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.