ಆರ್ಥಿಕವಾಗಿ ಹಿಂದುಳಿದವರಿಗೆ ಕೈಗೆಟಕುವ ಶುಲ್ಕದೊಂದಿಗೆ ಉನ್ನತ ಶಿಕ್ಷಣ ದೊರಕಿಸಿಕೊಡಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಆದರೆ ವೈದ್ಯಕೀಯ ಶಿಕ್ಷಣದ ಶುಲ್ಕವನ್ನು ಹೆಚ್ಚಳ ಮಾಡಿರುವುದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುವುದಲ್ಲದೆ, ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಂಡಂತಾಗಿದೆ. ಇದೊಂದು ರೀತಿಯಲ್ಲಿ, ವೈದ್ಯಕೀಯ ಶಿಕ್ಷಣ ಉಳ್ಳವರಿಗಷ್ಟೇ ಸೀಮಿತ ಎಂಬಂತಾಗಿದೆ. ಹಣದ ಮುಂದೆ ಪ್ರತಿಭೆ ನಗಣ್ಯವಾಗುತ್ತಿದೆ. ಸರ್ಕಾರದ ಯೋಜನೆಗಳು ಕನ್ನಡಿಯೊಳಗಿನ ಬಿಂಬವಾಗದಿರಲಿ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವೈದ್ಯಕೀಯ ಶಿಕ್ಷಣದ ಶುಲ್ಕ ಹೆಚ್ಚಳವನ್ನು ಹಿಂಪಡೆಯಲಿ ಅಥವಾ ಸಂಪೂರ್ಣ ಶುಲ್ಕವನ್ನು ಸರ್ಕಾರವೇ ಭರಿಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ಸಾಕಾರಗೊಳಿಸಲಿ.
ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿದೇಶಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳುವ ಜನಪ್ರತಿನಿಧಿ
ಗಳು, ವೈದ್ಯಕೀಯ ಶಿಕ್ಷಣವೂ ಸೇರಿದಂತೆ ಉಚಿತ ಉನ್ನತ ಶಿಕ್ಷಣ ನೀಡುತ್ತಿರುವ ಐರೋಪ್ಯ ರಾಷ್ಟ್ರಗಳಿಗೆ ಭೇಟಿ ಕೊಟ್ಟು, ಅಲ್ಲಿನಂತೆ ನಮ್ಮಲ್ಲೂ ಉಚಿತ ಉನ್ನತ ಶಿಕ್ಷಣದ ವ್ಯವಸ್ಥೆ ಮಾಡಲಿ.
-ಚಂದ್ರಶೇಖರ ಪುಟ್ಟಪ್ಪ,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.