ADVERTISEMENT

ಐಪಿಎಲ್ ಕ್ರಿಕೆಟ್: ಬಿಸಿಸಿಐ ನಿರ್ಧಾರಕ್ಕೆ ಬದ್ಧ ಶಶಾಂಕ್

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2010, 11:10 IST
Last Updated 19 ಡಿಸೆಂಬರ್ 2010, 11:10 IST

ಮುಂಬೈ (ಪಿಟಿಐ): ತಮ್ಮ ಒಪ್ಪಂದವನ್ನು ರದ್ದು ಪಡಿಸಿದ್ದ ಸಂಬಂಧ ಐಪಿಎಲ್ ಫ್ರಾಂಚೈಸಿಗಳಾದ ರಾಜಸ್ತಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ತಂಡಗಳು ತಂದಿರುವ ತಡೆಯಾಜ್ಞೆ ವಿರುದ್ಧದ ಮುಂದಿನ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್‌ಗೆ ನೀಡಲಾಗಿದೆ.

ಶನಿವಾರ ಇಲ್ಲಿ ನಡೆದ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಬೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಮನೋಹರ್ ಈಗ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಒಪ್ಪಂದದಲ್ಲಿ ದೋಷವಿದೆ ಎಂಬ ಕಾರಣ ರಾಜಸ್ತಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ತಂಡಗಳನ್ನು ಅಕ್ಟೋಬರ್ 10ರಂದು ಐಪಿಎಲ್‌ನಿಂದ ವಜಾಗೊಳಿಸಲಾಗಿತ್ತು. ಆದರೆ ಈ ತಂಡಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ.

ರಾಯಲ್ಸ್ ತಂಡಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಬಿಸಿಸಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್.ಜೆ.ವಾಜಿಫ್ದಾರ್ ಡಿಸೆಂಬರ್ 14ರಂದು ತಳ್ಳಿ ಹಾಕಿದ್ದರು. ಅಷ್ಟು ಮಾತ್ರವಲ್ಲದೇ, ಐಪಿಎಲ್ ನಾಲ್ಕನೇ ಅವತರಣಿಕೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.