ಚಿಕ್ಕಬಳ್ಳಾಪುರ: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪ್ರಾಯೋಜಕತ್ವದ ಡೆಕ್ಕನ್ ಅಥ್ಲೆಟಿಕ್ ಕ್ಲಬ್ ಆಶ್ರಯದಲ್ಲಿ ಭಾನುವಾರ ಇಲ್ಲಿ ನಡೆದ ಕೆ.ಎ. ನೆಟ್ಟಕಲ್ಲಪ್ಪ ಸ್ಮಾರಕ ರಾಜ್ಯಮಟ್ಟದ ರಸ್ತೆ ಓಟದ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ನ ಅಥ್ಲೀಟ್ ಅನಿಲ್ಕುಮಾರ್, ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ವಿದ್ಯಾನಗರದ ಕ್ರೀಡಾ ಶಾಲೆಯ ವಿದ್ಯಾರ್ಥಿನಿ ಆರ್.ಉಷಾ ಮೊದಲಿಗರಾಗಿ ಗೆಲುವಿನ ನಗೆ ಬೀರಿದರು.
16 ವರ್ಷದೊಳಗಿನವರ (2.5 ಕಿ.ಮೀ) ಬಾಲಕರ ವಿಭಾಗದಲ್ಲಿ ಸ್ಥಳೀಯ ಅಥ್ಲೀಟ್ ಎಸ್.ತೇಜಸ್ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಂಗಳೂರಿನ ವಿದ್ಯಾನಗರದ ಕ್ರೀಡಾ ಶಾಲೆಯ ವಿದ್ಯಾರ್ಥಿನಿ ಇ.ಬಿ.ಅರ್ಪಿತಾ ಪ್ರಥಮ ಪ್ರಶಸ್ತಿಗೆ ಭಾಜನರಾದವರು.
ಸ್ಪರ್ಧೆಯಲ್ಲಿ ಸ್ಥಳೀಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ 265 ಸ್ಪರ್ಧಿಗಳು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಾಗಿ ಸೆಣಸಿದರು. ಜೂನಿಯರ್ ಕಾಲೇಜು ಆವರಣದಲ್ಲಿರುವ ನಂದಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಿಗೆ ಜಿಲ್ಲಾಧಿಕಾರಿ ದೀಪ್ತಿ ಕಾನಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.